ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ತಾಲ್ಲೂಕಿನ ಗುಡಿಗೇನಹಳ್ಳಿಯಲ್ಲಿ ಜರುಗಿದೆ.
ಸೋಮಶೇಖರಯ್ಯ (58) ಮೃತ ರೈತ. ಸ್ವಂತಭೂಮಿ ಹೊಂದಿ ಕೃಷಿ ಚಟುವಟಿಕೆ ಮಾಡುತ್ತಿದ್ದ ರೈತ ಬೆಳೆಹಾನಿಯಿಂದ ಕಂಗಲಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೃಷಿ ಚಟುವಟಿಕೆ ಹಾಗೂ ಮನೆ ಕಟ್ಟಲು ಸಹಕಾರ ಸಂಘ, ಮೈಕ್ರೋ ಫೈನಾನ್ಸ್ ಹಾಗೂ ಖಾಸಗಿ ಲೇವಾದೇವಿಗಾರರಿಂದ ₹ 18 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಿರುಕುಳ ತಾಳಲಾರದೆ ಮಂಗಳವಾರ ಸಂಜೆ ಜಮೀನಿನ ಬಳಿ ವಿಷ ಸೇವಿಸಿ ಅಸ್ವಸ್ಥರಾಗಿದ್ದವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಶವವನ್ನು ಅಸ್ಪತ್ರೆ ಶವಾಗಾರದಲ್ಲಿಡಲಾಗಿದೆ.
ಈ ಕುರಿತು ಕೆರಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ತನಿಖೆ ನಡೆಯುತ್ತಿದೆ.