ಯುವಜನತೆ ತಂಬಾಕು ಸೇವನೆ ದುಶ್ಚಟಗಳಿಗೆ ಬಲಿಯಾಗದೆ ಹೆಚ್ಚಿನ ಅರಿವು ಮೂಡಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಮಹದೇವಪ್ಪ ಹೆಚ್ ಕರೆ ನೀಡಿದರು.
ಶ್ರೀರಂಗಪಟ್ಟಣ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಶ್ರೀರಂಗಪಟ್ಟಣ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ಶ್ರೀರಂಗಪಟ್ಟಣ ಹಾಗೂ ಬಿ ಜಿ ಎಸ್ ಪಿಯು ಕಾಲೇಜ್ ಶ್ರೀರಂಗಪಟ್ಟಣ ಇವರುಗಳ ಸಯುಕ್ತ ಆಶ್ರಯದಲ್ಲಿ ಶ್ರೀರಂಗಪಟ್ಟಣದ ಬಿ ಜಿ ಎಸ್ ಪಿಯು ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ “ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ಉಪನ್ಯಾಸ ನೀಡಿ ತಂಬಾಕು ಬಳಕೆ ಯಿಂದ ಉದ್ಭವಿಸುವ ಆರೋಗ್ಯ ಸಮಸ್ಯೆಗಳ ಕುರಿತು ವಿವರವಾಗಿ ತಿಳಿಸಿಕೊಟ್ಟರು.
ಸಂಸ್ಥೆಯ ಪ್ರಾಂಶುಪಾಲ ಹೆಚ್ ಎನ್ ಗೋಪಿ ಮಾತನಾಡಿ, ಪ್ರತಿವರ್ಷ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಅತ್ಯಂತ ಸ್ವಾಗತಾರ್ಹ ಎಂದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ ಮಾರುತಿ ಮಾತನಾಡಿ, ತಂಬಾಕು ಸೇವಿಸಿದಾಗ ಮನುಷ್ಯನ ದೇಹ ಮತ್ತು ಮನಸ್ಸುಗಳ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಟಿ ಮಂಜುನಾಥ್ ಮಾತನಾಡಿ ಕ್ಯಾನ್ಸರ್ ರೋಗದಿಂದ ಸಾವನ್ನಪ್ಪುತ್ತಿರುವವರಲ್ಲಿ ಶೇ 90% ರಷ್ಟು ತಂಬಾಕು ಬಳಸುತ್ತಾರೆ. ಕಾಯಿಲೆ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ಕಾಯಿಲೆ ಬರದಂತೆ ತಡೆಗಟ್ಟುವುದೇ ಉತ್ತಮ ಎಂದರು.
ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್ ಕಾರ್ಯಕ್ರಮ ನಿರೂಪಿಸಿ ತಂಬಾಕು ನಿಯಂತ್ರಣ ಕುರಿತಂತೆ ಪ್ರತಿಜ್ಞಾವಿಧಿ ಭೋದಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಜೆಎಂಎಫ್ಸಿ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹರೀಶ್ ಕುಮಾರ ಎಂ, ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ್, ಕಾರ್ಯದರ್ಶಿ ಡಿ ಪವನ್ ಗೌಡ, ಜಂಟಿ ಕಾರ್ಯದರ್ಶಿ ಡಿ ಕೃಷ್ಣೇಗೌಡ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸ್ಮಿತ, ಆಶಾ ಕಾರ್ಯಕರ್ತೆ ಚಾಂದನಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು