ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟದ ಅಭ್ಯರ್ಥಿ ಮಂಡ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಜಯಬೇರಿ ಬಾರಿಸಲಿದೆ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿಶ್ವವೇ ಮೆಚ್ಚುವಂತಹ ನಾಯಕರಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಸಾಧನೆಯನ್ನು ಜನತೆ ಮೆಚ್ಚಿದ್ದಾರೆ. ವಿಶ್ವದಲ್ಲೇ ಅತಿ ಹೆಚ್ಚು ಜನಪ್ರಿಯತೆಯನ್ನು ಹೊಂದಿರುವ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಕೇಂದ್ರದಲ್ಲಿ ಪ್ರಧಾನಿ ಮಾಡುವುದೇ ನಮ್ಮ ಉದ್ದೇಶವಾಗಿದೆ. ಇದು ಜನರ ಆಸೆಯೂ ಆಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ದಿವಾಳಿಯಾಗಿದೆ. ಸರ್ಕಾರಿ ನೌಕರರಿಗೆ ವೇತನ ಕೊಡಲು ಹಣವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಾಟಕವಾಡಿದ್ದಾರೆ. ರಾಜ್ಯ ಸರ್ಕಾರದ ಪ್ರತಿಭಟನೆ ಎಂದು ಹೇಳಿ ಇಲ್ಲಿನ ಜನರಲ್ಲಿ ಗೊಂದಲ ಮೂಡಿಸಿ ಅಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಎಂಬುದನ್ನು ಸಾಭೀತುಪಡಿಸಿದ್ದಾರೆ. ಪಕ್ಷದ ಪರವಾಗಿ ಹೋದರೆ ವಿಮಾನದ ವೆಚ್ಚ, ಉಳಿಯಲು ತಾಜ್ ಹೊಟೇಲ್ನ ವ್ಯವಸ್ಥೆ ಎಲ್ಲವೂ ಸಿಗುವುದಿಲ್ಲ ಎಂಬ ಕಾರಣಕ್ಕೆ ಸರ್ಕಾರದ ಹೆಸರಲ್ಲಿ ಸಿದ್ದರಾಮಯ್ಯ ಮತ್ತು ತಂಡ ನಾಟಕವಾಡಿದ್ದಾರೆ ಎಂದು ಛೇಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಎಸ್.ಇ. ಇಂದ್ರೇಶ್, ಮುಖಂಡರಾದ ಕೆ.ಎಸ್. ನಂಜುಂಡೇಗೌಡ, ಎಂ.ಆರ್. ಕುಮಾರಸ್ವಾಮಿ, ಎಚ್.ಆರ್. ಅಶೋಕ್, ಬ್ಯಾಟರಾಯಿಗೌಡ, ಜೋಗೀಗೌಡ ಇತರರು ಗೋಷ್ಠಿಯಲ್ಲಿದ್ದರು.