ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಘಟನೆ ಖಂಡಿಸಿ ಆರೋಪಿ ಶಿಕ್ಷಕನನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಸಮಾನ ಮನಸ್ಕರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಶ್ರೀರಂಗಪಟ್ಟಣದ ಕುವೆಂಪು ವೃತ್ತದ ಬಳಿ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ನೂರಾರು ಪ್ರಗತಿಪರ ಸಂಘಟನೆಗಳ ಮುಖಂಡರು ಮಾನವ ಸರಪಳಿ ನಿರ್ಮಿಸಿ ಹೆದ್ದಾರಿ ತಡೆದು ಆರೋಪಿ ಶಿಕ್ಷಕನ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಾಲಕಿಗೆ ಟ್ಯೂಷನ್ ಹೇಳಿಕೊಡುವ ನೆಪದಲ್ಲಿ ಅತ್ಯಾಚಾರ ಮಾಡಿ ಹತ್ಯೆ ಮಾಡಿರುವುದು ದೇಶದಲ್ಲಿ ತಲೆ ತಗ್ಗಿಸುವ ವಿಚಾರವಾಗಿದೆ. ಈ ವಿಚಾರದಲ್ಲಿ ಯಾರು ರಾಜಕೀಯ ಮಾಡದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾನೂನು ತಿದ್ದುಪಡಿ ಮಾಡಿ ಇಂತಹ ಕ್ರೂರಿಗಳಿಗೆ ಗಲ್ಲು ಶಿಕ್ಷೆಗೆ ಮುಂದಾಗಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಒಕ್ಕೂರಲಿನಿಂದ ಆಗ್ರಹಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೃತ ಬಾಲಕಿಯ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿ ನಿಮ್ಮ ಜೊತೆ ನಾವಿದ್ದೇವೆ ಎಂದು ಸಮಾಧಾನ ಮಾಡಬೇಕು. ಜೊತೆಗೆ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂಗಳ ಪರಿಹಾರ ಘೋಷಣೆ ಮಾಡಿರುವುದು ಕನಿಷ್ಠವಾಗಿದ್ದು,ಇದಕ್ಕೆ ಶಿಕ್ಷಕನ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ನಂತರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಾಲಕಿ ಕುಟುಂಬಕ್ಕೆ 50 ಲಕ್ಷ ರೂ.ಪರಿಹಾರ ನೀಡಿ ನೈತಿಕ ಸ್ಥೈರ್ಯ ತುಂಬಬೇಕು ಎಂದು ಆಗ್ರಹಿಸಿದರು.
ನಂತರ ಪಟ್ಟಣದ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ತಾಲೂಕು ಕಚೇರಿ ಮುಂದೆ ಧರಣಿ ಕುಳಿತರು.ನ್ಯಾಯಕ್ಕಾಗಿ ಆಗ್ರಹಿಸಿ ತಹಶೀಲ್ದಾರ್ ಶ್ವೇತಾ ಎನ್. ರವೀಂದ್ರ ಅವರಿಗೆ ಮನವಿ ಸಲ್ಲಿಸಿದರು.
ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ಕಸಾಪ ನಗರ ಅಧ್ಯಕ್ಷೆ ಸರಸ್ವತಿ, ಚಂದಗಾಲು ಶಂಕರ್, ಅಧ್ಯಕ್ಷರು, ಕರವೇ ಶಿವರಾಮೇಗೌಡ ಬಣ, ಉಪಾಧ್ಯಕ್ಷ ಅರಕೆರೆ ಜಗದೀಶ್, ಮಹಿಳಾ ಸಾಂತ್ವನ ಕೇಂದ್ರದ ಶೀಲಾ ನಂಜುಂಡಯ್ಯ, ಪುರಸಭೆ ಮಾಜಿ ಸದಸ್ಯೆ ನಳಿನಾ ಸತ್ಯನಾರಾಯಣ, ಕಸಾಪ ತಾಲೂಕು ಅಧ್ಯಕ್ಷ ಬಲ್ಲೇನಹಳ್ಳಿ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಗಾಯಿತ್ರಿ, ಕಾಮಧೇನು ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಲತಾ, ಗೀತಾ ಹರೀಶ್, ಕರವೇ ಅಧ್ಯಕ್ಷ ಸುರೇಶ್, ಸ್ವಾಮಿಗೌಡ, ರೈತ ಸಂಘದ ತಾಲೂಕು ಅಧ್ಯಕ್ಷ ಕೃಷ್ಣೇಗೌಡ, ಪಿಎಸ್ಎಸ್ಕೆ ಮಾಜಿ ನಿರ್ದೇಶಕ ಪಾಂಡು, ಒಕ್ಕಲಿಗ ಸಂಘದ ಅಧ್ಯಕ್ಷ ದೇವರಾಜು ಗೌಡಹಳ್ಳಿ, ಜೈ ಕರ್ನಾಟಕ ಸಂಘಟನೆ ಅಧ್ಯಕ್ಷ ಮಂಜು, ಬಾಹುಸಾರ್ ಮಿಷನ್ ಇಂಡಿಯಾದ ಸುರೇಶ್, ಕನ್ನಡ ಕರುನಾಡು ಸೇನೆಯ ಮಹಿಳಾ ಅಧ್ಯಕ್ಷೆ ಪ್ರಿಯಾ ರಮೇಶ್, ಕಟ್ಟಡ ಕಾರ್ಮಿಕ ಸಂಘದ ಕಾಂಗ್ರೇಸ್ ಅಲ್ಪ ಸಂಖ್ಯಾತ ಅಧ್ಯಕ್ಷ ಕಾಬೂಲ್, ಎಜಾಜ್ಪಾಷ, ಕೆಂಪೇಗೌಡ ಯುವ ಶಕ್ತಿ ವೇದಿಕೆಯ ಅಧ್ಯಕ್ಷ ಮಹೇಶ್, ವಡಿಯಾಂಡಹಳ್ಳಿ ನಾಗರಾಜು ಸೇರಿದಂತೆ ಇತರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.