ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ನಡೆಸಿ ಮತಯಾಚಿಸಿದರು.
ನಾಗಮಂಗಲ ಪಟ್ಟಣದ ಟಿ.ಬಿ.ಸರ್ಕಲ್, ಮಂಡ್ಯ ಸರ್ಕಲ್, ಬ್ರಹ್ಮದೇವರಹಳ್ಳಿ ಸರ್ಕಲ್ ನಲ್ಲಿ ನಟ ದರ್ಶನ್ ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರಿಗೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ದರ್ಶನ್, ಸ್ಟಾರ್ ಚಂದ್ರು ಅವರು ಒಳ್ಳೆ ಸಹೃದಯ ವ್ಯಕ್ತಿ. ಜನಸೇವೆ ಮಾಡಲು ಬಂದಿದ್ದಾರೆ. ಇವರನ್ನು ಗೆಲ್ಲಿಸುವ ಅವಕಾಶ ಸಿಕ್ಕಿದೆ. ಅದನ್ನು ಕಳೆದುಕೊಳ್ಳಬೇಡಿ.ಕಳೆದ ಲೋಕಸಭಾ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಅವರು ನಮಗೆ ಸಹಾಯ ಮಾಡಿದ್ದಾರೆ.ಅವರ ಋಣ ನನ್ನ ಮೇಲಿದ್ದು ಅದನ್ನು ತೀರಿಸಲು ನಾನು ಪ್ರಚಾರಕ್ಕೆ ಬಂದಿದ್ದೇನೆ. ನೀವೆಲ್ಲ ಸ್ಟಾರ್ ಚಂದ್ರು ಅವರನ್ನು ಅತ್ಯಧಿಕ ಮತಗಳಿಂದ ಆಯ್ಕೆ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮಾತನಾಡಿ, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಕೊಡಿ.ಇದೇ ತಾಲೂಕಿನ ರೈತನ ಮಗನನ್ನು ಗೆಲ್ಲಿಸಿ ಕಾಂಗ್ರೆಸ್ ಬೆಂಬಲಿಸಿ ಎಂದು ಮತದಾರರಲ್ಲಿ ವಿನಂತಿಸಿಕೊಂಡರು.
ಬಿರು ಬಿಸಿಲನ್ನು ಲೆಕ್ಕಿಸದೆ ದರ್ಶನ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಬಿ. ಎಂ. ರಸ್ತೆಯ ಎರಡು ಬದಿಗಳಲ್ಲಿ ನಿಂತಿದ್ದ ಯುವಕರು ದರ್ಶನ್, ಸಚಿವ ಚೆಲುವರಾಯಸ್ವಾಮಿ ಹಾಗೂ ಸ್ಟಾರ್ ಚಂದ್ರು ಅವರಿಗೆ ಜೈಕಾರ ಹಾಕಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಧಾನ ಪರಿಷತ್ ಮಾಜಿ ಸದಸ್ಯ ಅಪ್ಪಾಜಿಗೌಡ, ಸಚಿನ್ ಚಲುವರಾಯಸ್ವಾಮಿ ಮತ್ತಿತರರಿದ್ದರು.