ತಮಿಳುನಾಡು ಬಿಜೆಪಿಯ ಹಿರಿಯ ನಾಯಕಿ ಮತ್ತು ಖ್ಯಾತ ನಟಿ ಗೌತಮಿ ತಾಡಿಮಲ್ಲ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಈ ಕುರಿತು ಮಾಹಿತಿ ನೀಡಿದ ನಟಿ ಗೌತಮಿ ತಾಡಿಮಲ್ಲ, 2021ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದ ಪಕ್ಷವು ಕೊನೆಯ ಕ್ಷಣದಲ್ಲಿ ಕೈಬಿಟ್ಟಿತ್ತು. ಆದರೂ ಬಿಜೆಪಿಗೆ ಬದ್ಧವಾಗಿದ್ದೆ ಎಂದು ಹೇಳಿದ್ದಾರೆ.
ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಸೇರಿದಂತೆ ಹಲವರಿಗೆ ತನ್ನ ರಾಜೀನಾಮೆ ಪತ್ರವನ್ನು ಅವರು ಟ್ಯಾಗ್ ಮಾಡಿದ್ದಾರೆ.
ವ್ಯಕ್ತಿಯೊಬ್ಬರು ನನಗೆ ವಂಚಿಸಿದ್ದಾರೆ. ಈ ವೇಳೆ ನನಗೆ ಪಕ್ಷ ಮತ್ತು ನಾಯಕರಿಂದ ಯಾವುದೇ ಬೆಂಬಲ ಸಿಕ್ಕಿಲ್ಲ. ಬದಲಾಗಿ ನನ್ನ ನಂಬಿಕೆಗೆ ದ್ರೋಹ ಬಗೆದ ಮತ್ತು ನನಗೆ ಮೋಸ ಮಾಡಿದ ವ್ಯಕ್ತಿಗೆ ಅವರು ಸಹಾಯ ಮಾಡಿದ್ದಾರೆ ಮತ್ತು ಬೆಂಬಲಿಸುತ್ತಿದ್ದಾರೆ ಎಂದು ನನಗೆ ತಿಳಿದಿದೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.
ವಂಚನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಿರುವುದಾಗಿ ಹೇಳಿದ ನಟಿ, ಸಿಎಂ ಎಂಕೆ ಸ್ಟ್ಯಾಲಿನ್ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವುದಾಗಿ ಹೇಳಿದ್ದಾರೆ.
2021ರ ಚುನಾವಣೆಗೆ ರಾಜಪಾಳ್ಯಂ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಾ ಸಿದ್ಧತೆ ಮಾಡುವಂತೆ ನನಗೆ ಸೂಚಿಸಲಾಗಿತ್ತು. ನಾನು ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ್ದೇನೆ. ಆದರೆ ಕೊನೆಯ ವೇಳೆ ನನಗೆ ಟಿಕೆಟ್ ಕೊಟ್ಟಿಲ್ಲ. ಆದರೂ ಪಕ್ಷದ ಜೊತೆ ಬದ್ಧತೆ ಉಳಿಸಿಕೊಂಡಿದ್ದೆ. 25 ವರ್ಷಗಳಿಂದ ಬಿಜೆಪಿ ಜೊತೆಗೆ ಇದ್ದರೂ ಯಾವುದೇ ಬೆಂಬಲ ನೀಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.