ರಾಜ್ಯಮಟ್ಟದ 43ನೇ ಶ್ರೀಕಾಲಭೈರವೇಶ್ವರ ಜಾನಪದ ಕಲಾ ಮೇಳದ ಸೆ.23ರಿಂದ ಸೆ.25ರವರೆಗೆ ಆದಿಚುಂಚನಗಿರಿಯಲ್ಲಿ ನಡೆಯಲಿದೆ.
ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿ ಅವರ ದಿವ್ಯಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಗದ್ಗುರು, ಪದ್ಮಭೂಷಣ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿ ಅವರ ಶ್ರೀಗುರು ಸಂಸ್ಮರಣೋತ್ಸವ, ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ರಾಜ್ಯಮಟ್ಟದ 43ನೇ ಶ್ರೀಕಾಲಭೈರವೇಶ್ವರ ಜಾನಪದ ಕಲಾ ಮೇಳ ಜರುಗಲಿದೆ.
ಸೆ.23ರಂದು ಬೆಳಿಗ್ಗೆ 10 ಗಂಟೆಗೆ ಕಲಾಮೇಳ ಉದ್ಘಾಟನೆ ಮತ್ತು ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ, ಸಂಜೆ 5 ಗಂಟೆಗೆ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಮುತ್ತಿನ ಪಾಲಕಿ ಉತ್ಸವ ಹಾಗೂ ಜಾನಪದ ಕಲಾವಿದರ ವರ್ಣರಂಜಿತ ಮೆರವಣಿಗೆ ಹಾಗೂ ರಾತ್ರಿ 7 ಕ್ಕೆ ಶ್ರೀಕಾಲಭೈರವೇಶ್ವರಸ್ವಾಮಿ ಪುಷ್ಕರಣೆಯಲ್ಲಿ ತೆಪ್ಪೋತ್ಸವ ಜರುಗಲಿದೆ.
ಸೆ.24 ರಂದು ಮಧ್ಯಾಹ್ನ 2 ಗಂಟೆಗೆ ರಾಜ್ಯಮಟ್ಟದ ಜಾನಪದ ಕಲಾಮೇಳ ಸಮಾರೋಪ ಸಮಾರಂಭ ನೆರವೇರಲಿದ್ದು, ಸೆ.25ರಂದು ಬೆಳಗ್ಗೆ 10.30 ಗಂಟೆಗೆ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಶ್ರೀಗುರು ಸಂಸ್ಮರಣೋತ್ಸವ ನೆರವೇರಲಿದೆ.
ಕಲಾಮೇಳದಲ್ಲಿ ಭಾಗವಹಿಸುವ ಎಲ್ಲಾ ಕಲಾವಿದರಿಗೆ ಉಚಿತ ಊಟ, ವಸತಿಯ ಜೊತೆಗೆ ಸ್ತ್ರೀ ಕಲಾವಿದರಿಗೆ ಸೀರೆ ಮತ್ತು ಕಣವನ್ನು, ಪುರುಷ ಕಲಾವಿದರಿಗೆ ಪಂಚೆ ಮತ್ತು ಟವಲ್ಗಳನ್ನು ನೀಡಲಾಗುವುದು.
ಜಾನಪದ ಕಲಾಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ತಮ್ಮ ಆಧಾರ್ಕಾರ್ಡ್ ಜೊತೆಗೆ ತಮ್ಮ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾಗವಹಿಸುವಿಕೆಯ ಪತ್ರವನ್ನು ಕಡ್ಡಾಯವಾಗಿ ತರತಕ್ಕದ್ದು ಮತ್ತು ಪತ್ರ ತಂದ ಕಲಾವಿದರಿಗೆ ಮಾತ್ರ ಶ್ರೀಕ್ಷೇತ್ರಕ್ಕೆ ಬಂದು-ಹೋಗುವ ಪ್ರಯಾಣ ಭತ್ಯೆಯನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ. 9448124141, 9448048433, 9845565696 ಸಂಪರ್ಕಿಸಬಹುದು.