ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ನೂತನ ಶಿಕ್ಷ ನೀತಿ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿತು.
ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ, ಪಠ್ಯಕ್ರಮದ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮನಿರಪೇಕ್ಷ ವಾತಾವರಣವನ್ನು ರಕ್ಷಿಸಿ, ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ ಸೌಲಭ್ಯಗಳನ್ನು ಖಾತ್ರಿಪಡಿಸಬೇಕು. ಸ್ವಯಂ ಹಣಕಾಸು ಸಂಸ್ಥೆಗಳನ್ನು ನಿಲ್ಲಿಸಿ, ತಾರತಮ್ಯವಿಲ್ಲದೆ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಿ, ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಬೇಕು ಹಾಗೂ ಅತಿಥಿ ಶಿಕ್ಷಕರ ಹಕ್ಕುಗಳನ್ನು ರಕ್ಷಿಸಿ ರಕ್ಷಿಸಬೇಕೆಂದು AIDSO ಜಿಲ್ಲಾ ಸಂಚಾಲಕಿ ಚಂದ್ರಕಲಾ ಒತ್ತಾಯಿಸಿದ್ದಾರೆ.
ಎನ್.ಇ.ಪಿ ಶಿಕ್ಷಣ ನೀತಿಯ ಧಿಡೀರ್ ಹೇರಿಕೆಯಿಂದ ಉಂಟಾದ ಗೊಂದಲ ಹಾಗೂ ಹಲವು ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿವೆ. ಶಿಕ್ಷಣವನ್ನು ಸಂಪೂರ್ಣವಾಗಿ ವ್ಯಾಪಾರೀಕರಣ ಮಾಡಲು ಹೊರಟಿದ್ದ ಸರ್ಕಾರದ ವಿರುದ್ಧ – ‘ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ, ಸಾರ್ವಜನಿಕ ಶಿಕ್ಷಣ ಉಳಿಸಿ’ ಎಂಬ ಘೋಷಣೆಯೊಂದಿಗೆ 35 ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸಲಾಗಿತ್ತು.ಇದರಲ್ಲಿ ರಾಜ್ಯದಾದ್ಯಂತ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದನ್ನು ಗಮನಿಸಿ ತಮ್ಮ ಪ್ರಣಾಳಿಕೆಯಲ್ಲಿ ಎನ್.ಇ.ಪಿ 2020 ಅನ್ನು ಹಿಂಪಡೆಯುತ್ತೇವೆ ಎಂದು ಘೋಷಿಸಿದ್ದು ಸ್ವಾಗತಾರ್ಹವಾಗಿದೆ ಎಂದು ಸಂಘಟನೆ ತಿಳಿಸಿದೆ.
ರಾಜ್ಯದ ಜನತೆಯು ಜನವಿರೋಧಿ ನೀತಿಗಳಿಂದ ರೋಸಿಹೋಗಿದ್ದು, ನೂತನ ಸರ್ಕಾರದ ಆಡಳಿತದಿಂದ ಸುಧಾರಣೆಯನ್ನು ಬಯಸುತ್ತಿದ್ದಾರೆ. ಹಾಗೆಯೇ ವಿದ್ಯಾರ್ಥಿ ಸಮುದಾಯವು ಸಹ ಅವರು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪೇಕ್ಷಿಸುತ್ತದೆ. ಪಠ್ಯಪುಸ್ತಕಗಳಲ್ಲಿ ವೈಜ್ಞಾನಿಕ ಮತ್ತು ಧರ್ಮ ನಿರಪೇಕ್ಷ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಪಠ್ಯಕ್ರಮವನ್ನು ರೂಪಿಸಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕಾಗಿ ಎಐಡಿಎಸ್ಓ ರಾಜ್ಯ ಸಮಿತಿಯು ಸರ್ಕಾರಕ್ಕೆ ಮನವಿ ಮಾಡಿದೆ.