ಸುಪ್ರೀಂಕೋರ್ಟಿನ ತೀರ್ಪಿನಂತೆ ಇಲ್ಲಿಯವರೆಗೆ ತಮಿಳುನಾಡಿಗೆ ನಾವು ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20ನೇ ತಾರೀಖಿನ ವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಬುಧವಾರ ಬೆಂಗಳೂರಿನಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯ ವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ…
— CM of Karnataka (@CMofKarnataka) August 23, 2023
“>
ಕಾವೇರಿ ಕೊಳ್ಳದ ವಾಸ್ತವ ಸ್ಥಿತಿಯನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ. ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ. ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ವರ್ಷ ಮಳೆ ಕಡಿಮೆ ಆಯಿತು. ಜೂನ್ ಹಾಗೂ ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ ಎಂದು ವಿವರಿಸಿದ್ದಾರೆ ಎಂದರು.
ವಾದ ಮಾಡಿದ್ದರಿಂದಲೇ ನೀರಿನ ಇಳಿಕೆ
ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ ನೀರಿನಿಂದ 10,000 ಕ್ಯೂಸೆಕ್ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯೂಸೆಕ್ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.
ಪ್ರಧಾನಿ ಬಳಿಗೆ ನಿಯೋಗ
ಮೇಕೆದಾಟು, ಕಾವೇರಿ, ಮಹದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಸರ್ವಪಕ್ಷಗಳ ನಿಯೋಗದ ಮೂಲಕ ತೆರಳಿ ಪ್ರಧಾನಿಯನ್ನು ಭೇಟಿಯಾಗೋಣ. ಇದಕ್ಕೆ ಎಲ್ಲ ಪಕ್ಷಗಳು ನಮಗೆ ಸಹಕಾರ ನೀಡಲಿವೆ ಎಂದು ಭಾವಿಸಿದ್ದೇನೆ. ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಅಗತ್ಯ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಸಂಕಷ್ಟ ಹಂಚಿಕೆ ಸೂತ್ರ ತೀರ್ಮಾನ ಆಗಲೇಬೇಕು
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ. ಕರ್ನಾಟಕದ ನೆಲ, ಜಲ, ಗಡಿ, ಭಾಷೆಗಳ ಬಗ್ಗೆ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳೂ ಒಕ್ಕೊರಲಿನಿಂದ ಮಾತನಾಡಿವೆ. ಈ ವಿಷಯಗಳಲ್ಲಿ ರಾಜಕೀಯ ಮಾಡುವ ಪ್ರಯತ್ನವನ್ನು ಯಾರೂ ಮಾಡಿಲ್ಲ, ಮಾಡಲೂಬಾರದು. ಯಾಕೆಂದರೆ ನಾವೆಲ್ಲರೂ ರಾಜ್ಯದ ಏಳು ಕೋಟಿ ಜನರ ಹಿತ ಕಾಪಾಡಬೇಕಾಗಿದೆ ಎಂದರು.
ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ಜಗದೀಶ ಶೆಟ್ಟರ್, ಸದಾನಂದಗೌಡ, ವೀರಪ್ಪ ಮೊಯ್ಲಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು, ಸಂಸದರು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ವಕೀಲರಾದ ಮೋಹನ್ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.