ಮಳವಳ್ಳಿ ತಾಲೂಕಿನ ಕಿರಗಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಸಮಾರಂಭ ಜುಲೈ 14ರಂದು ಏರ್ಪಡಿಸಲಾಗಿದೆ.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಮುಖಂಡ ಮರಿಮಾದಯ್ಯ ಹಾಗೂ ಯುವ ಮುಖಂಡ ರಘುಮೂರ್ತಿ ಅವರು, ಅಂದು ಬೆಳಿಗ್ಗೆ 10.30 ಕ್ಕೆ ಶಾಸಕ ಪಿ ಎಂ ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ಜರುಗಲಿರುವ ಸಮಾರಂಭದಲ್ಲಿ ಮೈಸೂರಿನ ಉರಿಲಿಂಗ ಪೆದ್ದ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದು, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ರಾದ ಎಂ ನಂಜುಂಡಸ್ವಾಮಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದರು.
ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ ಶಿವಕುಮಾರ್ ಮುಖ್ಯ ಭಾಷಣ ಮಾಡಲಿದ್ದು, ನಟ ಚೇತನ್ ಅಹಿಂಸಾ, ಯಶವಂತಪುರ ಎಪಿಎಂಸಿ ಕಾರ್ಯದರ್ಶಿ ಕೆ ಪಿ ದೊರೆಸ್ವಾಮಿ, ಭಾರತೀಯ ಬೌದ್ದ ಮಹಾಸಭಾದ ಯುವ ಘಟಕದ ರಾಜ್ಯಾಧ್ಯಕ್ಷ ದರ್ಶನ್ ಸೋಮಶೇಖರ್, ನಟ ಸಂದೇಶ್ ಸೇರಿದಂತೆ ಹಲವಾರು ಗಣ್ಯರು ಈ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಅಂಬೇಡ್ಕರ್ ಅನುಯಾಯಿಗಳು, ಮಳ್ಳವಳ್ಳಿ ತಾಲೂಕಿನ ದಲಿತ ಬಂಧುಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಅವರು ಕೋರಿದರು.
ಮುಖಂಡರಾದ ನಿವೃತ್ತ ಮುಖ್ಯಶಿಕ್ಷಕ ಮಹಾ ದೇವಯ್ಯ, ವಿಷಕಂಠಯ್ಯ, ಗ್ರಾ ಪಂ ಸದಸ್ಯ ನಾಗಮಾಧು, ಶೇಖರ್, ಸಾವುಕಯ್ಯ, ಮಹಾದೇವಸ್ವಾಮಿ, ಜಯರಾಜು, ಮಾರ್ಕಾಲು ನಟರಾಜ್ ,ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ನಂಜುಂಡಸ್ವಾಮಿ, ಕುಮಾರಸ್ವಾಮಿ ಮತ್ತಿತರರು ಗೋಷ್ಠಿಯಲ್ಲಿ ಹಾಜರಿದ್ದರು.