ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಡ್ಯ ನಗರದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕೆಲ ಕಾಲ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ರವಾನಿಸಿದರು.
ರೈತಸಂಘದ ಒತ್ತಾಯಗಳೇನು ?
- ಹಾಲು ಉತ್ಪಾದಕರಿಗೆ ನೀಡಬೇಕಾಗಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.
- ಕೇಂದ್ರ ಸರ್ಕಾರ ಕಬ್ಬಿಗೆ ಎಫ್ಆರ್ಪಿ ದರವನ್ನು ಶೇ. 8.5 ಇಳುವರಿಗೆ ನಿಗದಿಪಡಿಸಿ ಟನ್ ಕಬ್ಬಿಗೆ 4500 ರೂ. ಘೋಷಿಸಬೇಕು. ರಾಜ್ಯ ಸರ್ಕಾರ ಈಗಾಗಲೇ ಘೋಷಣೆ ಮಾಡಿರುವಂತೆ ಬಾಕಿ 150 ರೂ.ಗಳನ್ನು ಪಾವತಿಸಬೇಕು.
- ಕೃಷ್ಣರಾಜಸಾಗರ ಹಾಗೂ ಹೇಮಾವತಿ ಜಲಾಶಯಗಳಿಂದ ಜನ-ಜಾನುವಾರುಗಳು ಹಾಗೂ ಹಾಲಿ ಬೆಳೆದಿರುವ ಬೆಳೆಗಳ ರಕ್ಷಣೆಗೆ ತಕ್ಷಣವೇ ನೀರು ಬಿಡುಗಡೆ ಮಾಡಬೇಕು.
- 2020ರ ಅಣೆಕಟ್ಟು ಸುರಕ್ಷತಾ ಕಾಯಿದೆಯನ್ನು ಕೂಡಲೇ ಜಾರಿಗೊಳಿಸಬೇಕು. ರಾಷ್ಟ್ರೀಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಈಗಾಗಲೇ ಅಣೆಕಟ್ಟೆಗೆ ಗಣಿಗಾರಿಕೆಯಿಂದ ಅಪಾಯವಿದೆ ಎಂದು ಹೇಳಿರುವುದರಿಂದ ಕೆ.ಆರ್.ಎಸ್. ಸುತ್ತಮುತ್ತ ಪರೀಕ್ಷಾರ್ಥ ಸ್ಪೋಟ ಮಾಡದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಬೇಕು.
- ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನಾತ್ಮಕವಾಗಿ ಶಾಸನ ರೂಪಿಸಬೇಕು. ರೈತರ ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ಈ ಹಿಂದೆ ಇದ್ದಂತಹ ಅಕ್ರಮ ಸಕ್ರಮ ಪದ್ಧತಿಯನ್ನು ಮುಂದುವರಿಸಬೇಕು.
- ಮಂಡ್ಯ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳನ್ನು ದರ ನಿಗದಿಪಡಿಸಿ ಪ್ರಾರಂಭಿಸುವಂತೆ ಸರ್ಕಾರ ನಿರ್ದೇಶನ ನೀಡಬೇಕು.
- ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಆಗ್ರಹಿಸಿದರು.
ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ಕಾರ್ಯದರ್ಶಿ ಲಿಂಗಪ್ಪಾಜಿ, ಎಸ್.ಕೆ. ರವಿಕುಮಾರ್, ಮುಖಂಡರಾದ ಬೋರಾಪುರ ಶಂಕರೇಗೌಡ, ಜಿ.ಎ. ಶಂಕರ್, ವಿಜಯಕುಮಾರ್, ಪಿ.ಬಾಲಕೃಷ್ಣ, ಎಸ್.ಬಿ. ಪುಟ್ಟಸ್ವಾಮಿ, ಎಸ್.ಸಿ. ಮರಿಚನ್ನೇಗೌಡ, ಚಂದ್ರು ಶಿವಳ್ಳಿ, ಕೆ.ಟಿ. ಗೋವಿಂದೇಗೌಡ, ಜಿ.ಕೆ. ರಾಮಕೃಷ್ಣ, ಕೃಷ್ಣೇಗೌಡ, ಪಿ. ನಾಗರಾಜು ಕೆನ್ನಾಳು ಸೇರಿದಂತೆ ಹಲವರು ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿದ್ದರು.