ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮತ್ತು ಉತ್ತಮ ಆರೋಗ್ಯಕ್ಕೆ ಸ್ವಚ್ಛ ಪರಿಸರ ಅಗತ್ಯವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಡಾ. ಎಸ್.ಡಿ. ಬೆನ್ನೂರ ತಿಳಿಸಿದರು.
ಶ್ರೀರಂಗಪಟ್ಟಣ ತಾಲ್ಲೂಕಿನ ಹುಲಿಕೆರೆ ಗ್ರಾಮದ ಬಿಜಿಎಸ್ ಪ್ರೌಢ ಶಾಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಆಯುಷ್ಮಾನ ಆರೋಗ್ಯ ಮಂದಿರ ಬೆಳಗೊಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ಮಲೇರಿಯಾ ವಿರೋಧಿ ಮಾಸಾಚರಣೆ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಮನುಷ್ಯನಿಗೆ ಆರೋಗ್ಯ ಒಂದು ಸಂಪತ್ತು. ಆರೋಗ್ಯ ಸಂಪತ್ತು ಚೆನ್ನಾಗಿರಬೇಕೆಂದರೆ ನಮ್ಮ ಸುತ್ತಮುತ್ತಲಿನ ವಾತಾವರಣ ಶುಚಿಯಾಗಿಟ್ಟುಕೊಳ್ಳಬೇಕು.ವಾತಾವರಣ ಸ್ವಚ್ಛವಾಗಿರದಿದ್ದರೆ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. 2025ರ ವೇಳೆಗೆ ಮಲೇರಿಯಾ ರೋಗವನ್ನು ಸಂಪೂರ್ಣ ನಿರ್ಮೂಲನೆಗೆ ಪಣ ತೊಡೋಣ ಹಾಗೂ ಮಲೇರಿಯಾ ಮುಕ್ತ ಸಮಾಜ ನಿರ್ಮಿಸೋಣ ಎಂದು ಮಕ್ಕಳಿಗೆ ಸಲಹೆ ನೀಡಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಟಿ.ಟಿ. ಜ್ಯೋತಿ ಮಾತನಾಡಿ, ಸ್ವಯಂ ರಕ್ಷಣಾ ವಿಧಾನಗಳಾದ ಸಂಜೆ ವೇಳೆ ಮೈತುಂಬ ಬಟ್ಟೆ ಧರಿಸುವುದು ಸೇರಿದಂತೆ,ಸೊಳ್ಳೆ ಪರದೆ,ಬೇವಿನ ಸೊಪ್ಪಿನ ಹೊಗೆ,ಸೊಳ್ಳೆ ಬತ್ತಿ ಹಾಗೂ ಸೊಳ್ಳೆ ಬ್ಯಾಟ್ ಮುಂತಾದವುಗಳ ಮೂಲಕ ಸೊಳ್ಳೆಗಳನ್ನು ನಿಯಂತ್ರಿಸಿ,ರೋಗದಿಂದ ಪಾರಾಗಬಹುದಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಆಶಾ ಹಾಗೂ ಸಹ ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರಾದ ಅನುಸೂಯ,ಜ್ಯೋತಿ ಇತರರು ಉಪಸ್ಥಿತರಿದ್ದರು.