ವರದಿ : ಪ್ರಭು ವಿ.ಎಸ್.
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ತಾಲೂಕು ಕಚೇರಿ ಬಳಿ ಜಮಾವಣೆಗೊಂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಕೆ ಮಾಡಿ ಬಡವರ್ಗದ ಜನರ ಹಿತಕಾಯಬೇಕೆಂದು ಒತ್ತಾಯಿಸಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಡವರ್ಗದವರ ಹೊಟ್ಟೆ ಮೇಲೆ ಹೊಡೆಯುತ್ತಿದ್ದು, ದಿನನಿತ್ಯ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಇನ್ನಿತರೆ ದಿನಬಳಿಕೆ ವಸ್ತುಗಳನ್ನು ಹೆಚ್ಚಳ ಮಾಡುವುದರಿಂದ ಬಡವರು ಜೀವನ ನಡೆಸುವುದೇ ಕಷ್ಟ ಸಾಧ್ಯವಾಗಿದೆ ಎಂದು ಆರೋಪಿಸಿದರು.
ಸರ್ಕಾರ ಕೇವಲ ಬಂಡವಾಳಶಾಹಿಗಳ ಪರ ಧನಿ ಎತ್ತುತ್ತಿದ್ದು ರೈತರು, ಕೂಲಿ ಕಾರ್ಮಿಕರು, ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸುವ ಮೂಲಕ ದುರಾಡಳಿತ ನಡೆಸುತ್ತಿರುವ ಸರ್ಕಾರವನ್ನು ಕಿತ್ತೊಗೆಯುವ ಸಂಕಲ್ಪವನ್ನು ಮಾಡಬೇಕಾದ ಅನಿವಾರ್ಯತೆ ಬಂದೊದಗಿರುವುದಾಗಿ ದೂರಿದರು.
ಕೆಲ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದು ತಮ್ಮ ಅಧಿಕಾರ ಉಳಿಸಿಕೊಳ್ಳುವುದರಲ್ಲೇ ಕಾಲ ಕಳೆಯುತ್ತಿರುವ ಸಚಿವರು, ಮಂಡ್ಯ ಜಿಲ್ಲೆಯತ್ತ ಮುಖ ಮಾಡದಿರುವುದು ವಿಪರ್ಯಾಸ ಸಂಗತಿಯಾಗಿದ್ದು, ಕಳೆದ ಹಲವು ದಿನಗಳಿಂದಲೂ ರೈತರು ಕಬ್ಬಿಗೆ ಬೆಂಬಲ ಬೆಲೆ ನಿಗಧಿ ಮಾಡುವಂತೆ ಒತ್ತಾಯಿಸಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂದು ಆರೋಪಿಸಿದರು.
ಸರ್ಕಾರ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವ ಜೊತೆಗೆ ಎಲ್ಲಾ ವರ್ಗದ ಜನರ ನೆರವಿಗೆ ಧಾವಿಸಿ ಸಂಕಷ್ಟದಿಂದ ಪಾರುಮಾಡುವಂತೆ ತಪ್ಪಿದಲ್ಲಿ ರಾಜ್ಯ ವ್ಯಾಪ್ತಿ ಪ್ರತಿಭಟನೆಗೆ ಮುಂದಾಗುವುದಾಗಿ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆ ವೇಳೆ ಕೆಪಿಸಿಸಿ ಸದಸ್ಯ ಎಸ್. ಗುರುಚರಣ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿ.ಪಂ. ಮಾಜಿ ಅಧ್ಯಕ್ಷ ಸುರೇಶ್ಕಂಠಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಸ್ಥಳೀಯ ಮುಖಂಡರಾದ ರಾಘವಾ, ಕೃಷಿಕ ಸಂತೋಷ್ಕುಮಾರ್, ಅಜ್ಜಹಳ್ಳಿ ರಾಮಕೃಷ್ಣ, ಮಹಮದ್ ಯತೇಶಾಮ್, ಕಬ್ಬಾಳಯ್ಯ, ಸುರೇಶ್, ಮಣಿಗೆರೆ ರಾಮಚಂದ್ರು ಇತರರು ನೇತೃತ್ವ ವಹಿಸಿದ್ದರು.