Saturday, May 4, 2024

ಪ್ರಾಯೋಗಿಕ ಆವೃತ್ತಿ

ಕನ್ನಡ ನೆಲ-ಜಲ ಹೋರಾಟಗಾರರ ಮೇಲಿನ ಪ್ರಕರಣ ಕೈಬಿಡಲು ಸರ್ಕಾರಕ್ಕೆ ಮನವಿ

ಕನ್ನಡ ನಾಡು, ನುಡಿ, ನೆಲ-ಜಲಕ್ಕಾಗಿ ಹೋರಾಟ ನಡೆಸಿದ ಹೋರಾಟಗಾರರ ಮೇಲೆ ಕಳೆದ ಬಿಜೆಪಿ ಸರ್ಕಾರ ವಿನಃಕಾರಣ ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದ ಸಾರಾಂಶ

ರಾಜ್ಯದಲ್ಲಿ ಈ ಹಿಂದೆ ನಡೆದ ನಾಡಿನ ನೆಲ-ಜಲ ಮತ್ತು ಭಾಷೆಯ ಹಿತರಕ್ಷಣೆಗಾಗಿ ಹಲವಾರು ಹೋರಾಟಗಳು ನಡೆದಿದ್ದು, ಸದರಿ‌ ಹೋರಟಗಳಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು, ಹಿರಿಯ ರಾಜಕಾರಣಿಗಳು, ಕನ್ನಡಪರ ಹೋರಾಟಗಾರರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ನಿರಂತರ ಪ್ರತಿಭಟನೆ ನಡೆಸಿದ್ದರು. ಕಾವೇರಿ ನೀರಿಗೆ ಸಂಬಂಧಿಸಿದಂತೆ ಮೇಕೆದಾಟು ಹಾಗೂ ಇನ್ನಿತರೆ ವಿಷಯಗಳಿಗೆ ಸಾಕಷ್ಟು ಧರಣಿಗಳು, ಪ್ರತಿಭಟನೆಗಳು ಹಾಗೂ ಪಾದಯಾತ್ರೆಗಳು ನಡೆದಿದ್ದು, ಅಂದಿನ ಬಿಜೆಪಿ ಸರ್ಕಾರವು ಹೋರಾಟದ ಕಿಚ್ಚನ್ನು ನಿಯಂತ್ರಿಸಲು ಶಾಸಕರು, ಮಾಜಿ ಶಾಸಕರು, ಹಿರಿಯ ರಾಜಕಾರಣಿಗಳು, ಮುಖಂಡರುಗಳು, ರೈತ ಹೋರಾಟಗಾರರು, ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ. ಇದರಿಂದಾಗಿ ಹಲವಾರು ಜನರು ಇಂದಿಗೂ ವಿನಾಕಾರಣ ನ್ಯಾಯಾಲಯಗಳಲ್ಲಿ ಅಲೆದಾಡುತ್ತಿದ್ದು, ಹೀಗಾಗಿ ಪ್ರಕರಣದಲ್ಲಿರುವವರು ಸೇರಿದಂತೆ ಕುಟುಂಬದವರು ಇದರಿಂದ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಪ್ರತಿಭಟನೆಗಳು, ಧರಣಿಗಳನ್ನು ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಭಾಗವಾಗಿದ್ದು, ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಒಳ್ಳೆಯ ಉದ್ದೇಶಕ್ಕಾಗಿ ನಡೆಸುವ ಹೋರಟಗಳು ಹಾಗೂ ಪ್ರತಿಭಟನಾ ಮಾರ್ಗದ ಮೂಲಕ ಸರ್ಕಾರದ ಕಣ್ಣು ತೆರೆಸಿ ಜನೋಪಯೋಗಿ ಯೋಜನೆಗಳ ಹಾಗೂ ಕಾಮಗಾರಿಗಳ ಅನುಷ್ಠಾನಗೊಳಿಸುವ ಸಂಬಂಧ ಒತ್ತಡ ಹೇರಲು ಪಕ್ಷತೀತಾವಾಗಿ ಎಲ್ಲರೂ ಹೋರಾಟಗಳಲ್ಲಿ ಭಾಗಿಯಾಗಿರುತ್ತಾರೆ.

ಆದರೆ ಇಂಥ ಸಂದರ್ಭದಲ್ಲಿ ಇವರ ಮೇಲೆ ಅಂದಿನ ಸರ್ಕಾರ ರಾಜ್ಯದ ವಿವಿಧ ಪೋಲಿಸ್ ಠಾಣೆಗಳಲ್ಲಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಲವಾರು ಕೇಸುಗಳನ್ನು ದಾಖಲು ಮಾಡಿದೆ. ಇದರಿಂದ ಹಲವಾರು ಜನರು ಇಂದಿಗೂ ಸಹ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಕ್ಷವು ಒಂದು ಉಗ್ರ ಹೋರಾಟವನ್ನೇ ನಡೆಸಿ, ಇದಕ್ಕಾಗಿ ಪಾದಯಾತ್ರೆಯ ಮಾರ್ಗವಾಗಿ ಸರ್ಕಾರದ ಗಮನವನ್ನು ಸೆಳೆದಿತ್ತು. ಈ ಪಾದಯಾತ್ರೆಯಲ್ಲಿ ಭಾಗಿಯಾದ ಹಲವರ ಮೇಲೆ ವಿನಾಕಾರಣ ಸುಳ್ಳು ಪ್ರಕರಣಗಳು ದಾಖಲಾಗಿದ್ದು, ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರು, ರೈತರ ಮೇಲೆ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಆದುದರಿಂದ, ಇಂತಹ ಹಲವಾರು ಪ್ರಕರಣಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತಂದು ಮರು ಪರಿಶೀಲನೆ ನಡೆಸಿ ದಾಖಲಾಗಿರುವ ಪ್ರಕರಣಗಳನ್ನು ಜರೂರಾಗಿ ಕೈಬಿಡುವಂತೆ ಈ ಮೂಲಕ ಮನವಿ ಮಾಡುತ್ತೇನೆ ಎಂದು ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!