ಜೂ.3ರಂದು ನಡೆಯುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಯಾಗಿರುವ ವಿವೇಕಾನಂದರವರಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಅತೀ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವಂತೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆಸ್ತೂರು ಬಿಳಿಯಪ್ಪ ಮನವಿ ಮಾಡಿದರು.
ಮದ್ದೂರು ತಾಲ್ಲೂಕಿನ ಭಾರತೀನಗರದ ಸುದ್ದಿಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನತಾದಳದ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಗೋವಿಂದೇಗೌಡರು ದೊಡ್ಡ ಕ್ರಾಂತಿಯನ್ನೇ ಮಾಡಿದ್ದಾರೆ. ಲಕ್ಷಾಂತರ ಜನರನ್ನು ಶಿಕ್ಷಕರನ್ನಾಗಿ ನೇಮಕ ಮಾಡಿದ್ದಾರೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಅನುಕೂಲವಾಗಿದೆ. ಅದೇ ರೀತಿ ಎಚ್.ಡಿ.ಕುಮಾರಣ್ಣ ಅವರು ಮುಖ್ಯಮಂತ್ರಿಯಾಗಿದ್ದಂತಹ ಸಂದರ್ಭದಲ್ಲಿ ಒಂದೂವರೆ ಸಾವಿರಕ್ಕಿಂತ ಹೆಚ್ಚಾಗಿ ಪ್ರೌಢಶಾಲೆಗಳನ್ನು, ಪದವಿ ಪೂರ್ವ ಕಾಲೇಜು, ಐಟಿಐ ಕಾಲೇಜು, ಪದವಿ ಕಾಲೇಜನ್ನು ತೆರೆದಿದ್ದಾರೆ. ಇದರಿಂದ ಅನೇಕ ಶಿಕ್ಷಕರಿಗೆ ಕೆಲಸಗಳು ದೊರೆತಿವೆ. ಈ ರೀತಿ ಶಿಕ್ಷಣದಲ್ಲಿ ಕ್ರಾಂತಿ ಮಾಡಿದ್ದಂತಹ ಪಕ್ಷ ರಾಜ್ಯದಲ್ಲಿ ಇದ್ದರೆ ಅದು ಜನತಾದಳ ಪಕ್ಷ ಮಾತ್ರ ಎಂದು ವಿವರಿಸಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಂತಹ ಸಂದರ್ಭಲ್ಲಿ ಬೈಸಿಕಲ್ ಕೊಡುಗೆ ನೀಡುವ ಮೂಲಕ ಶಾಲೆಗಳಿಗೆ ಉತ್ತೇಜನ ನೀಡಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಾಗಿದೆ ಎಂದರು.
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ ಮಾತನಾಡಿ, ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಯಾಗಿದ್ದಾಗ ಗೋವಿಂದೇಗೌಡರು ಶಿಕ್ಷಣ ಮಂತ್ರಿಯಾಗಿ ಸಾಕಷ್ಟು ಶಿಕ್ಷಕರನ್ನು ಭ್ರಷ್ಟಾಚಾರ ರಹಿತವಾಗಿ ಒಂದೂ ರೂಪಾಯಿ ಲಂಚವನ್ನು ಪಡೆಯದೇ ಈ ರಾಜ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದರು.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳೇ ಗೆಲ್ಲುತ್ತಾ ಬಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಒಂದು ಕಡೆ ನೆಲೆ ನಿಂತವರಲ್ಲ. ಒಂದೊಂದು ಚುನಾವಣೆಯಲ್ಲೂ ಒಂದೊಂದು ಪಕ್ಷದಿಂದ ಸ್ಪರ್ಧೆ ಮಾಡಿದ್ದಾರೆ. ಅವರು ಮೂಲತಃ ಶಿಕ್ಷಕರಲ್ಲ. ವಿವೇಕಾನಂದರವರು ಶಿಕ್ಷಕರ ಕ್ಷೇತ್ರದಲ್ಲಿ ಹೊಸ ಮುಖವಾಗಿದ್ದು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆಂದು ಬಂದಿದ್ದಾರೆ. ಅವರಿಗೆ ಶಿಕ್ಷಕರು ಆಶೀರ್ವಾದ ಮಾಡಿ ಒಂದು ಅವಕಾಶ ನೀಡಲಿ ಎಂದು ಮನವಿ ಮಾಡಿದರು.
ಇದೇ ವೇಳೆ ಜೆಡಿಎಸ್ ಮುಖಂಡರಾದ ಮಾರಸಿಂಗನಹಳ್ಳಿ ಮಲ್ಲರಾಜು, ಗುಡಿಗೆರೆ ಶಿವು, ಬಸವರಾಜು ಇದ್ದರು.