ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಮಾಡಲು ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಜಿಲ್ಲಾಡಳಿತದಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಾಹಿತಿ ಸಂಗ್ರಹಣೆ ಮಾಡಲು ಹೆಚ್.ಆರ್.ಎಂ.ಎಸ್ ನಿಂದ ಮಾಹಿತಿ ಪಡೆದು ಆ್ಯಪ್ ಸಿದ್ದಪಡಿಸಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯಲ್ಲಿ ತಮ್ಮ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿವರವನ್ನು 10 ದಿನದೊಳಗಾಗಿ ಭರ್ತಿ ಮಾಡಿ ಮಾಹಿತಿ ಒದಗಿಸಬೇಕು ಎಂದರು.
ಸಿಬ್ಬಂದಿಗಳ ಮತದಾರರ ಗುರುತಿನ ಚೀಟಿ ಸಂಖ್ಯೆ, ವಾಸಸ್ಥಳ, ದೀರ್ಘಾವಧಿ ರಜೆ ಪಡೆದಿದ್ದರೆ, ತೀವ್ರತರ ಕಾಯಿಲೆಯಿಂದ ಬಳಲುತ್ತಿದ್ದಾರೆ ಸೇರಿದಂತೆ ವಿವಿಧ ಮಾಹಿತಿಯನ್ನು ಕೇಳಲಾಗಿದೆ. ಅಧಿಕಾರಿಗಳು ನಿಖರವಾದ ಮಾಹಿತಿಯನ್ನು ಭರ್ತಿ ಮಾಡಿ. ತಪ್ಪು ಮಾಹಿತಿ ನೀಡಿದ್ದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಎನ್. ಐ.ಸಿ ಅಧಿಕಾರಿ ಸುರೇಶ್, ಉಪವಿಭಾಗಾಧಿಕಾರಿ ಶಿವಮೂರ್ತಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು