Tuesday, September 17, 2024

ಪ್ರಾಯೋಗಿಕ ಆವೃತ್ತಿ

ಹೆಣ್ಣುಭ್ರೂಣಹತ್ಯೆ ಜಾಲವನ್ನು ಭೇದಿಸಿದ ಮಂಡ್ಯ ಪೊಲೀಸ್; 12 ಆರೋಪಿಗಳ ಅರೆಸ್ಟ್

ರಾಜ್ಯದಾದ್ಯಂತ ಗಮನ ಸೆಳೆದಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣದ ಜಾಲವನ್ನು ಭೇದಿಸಿರುವ ಮಂಡ್ಯ ಜಿಲ್ಲಾ ಪೊಲೀಸ್ ವಿಶೇಷ ತಂಡವು, ಒಟ್ಟು 12 ಆರೋಪಿಗಳನ್ನು ವಶಕ್ಕೆ ಪಡೆದಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ಅಭಿಷೇಕ್, ವಿರೇಶ್‌ ಸೇರಿದಂತೆ ಪುಟ್ಟರಾಜು, ಕುಮಾರ್, ಶಾರದಮ್ಮ, ದಾಸೇಗೌಡ, ಲ್ಯಾಬ್ ಸತ್ಯ, ಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿಯವರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಹೆಣ್ಣುಭ್ರೂಣವನ್ನು ಅಕ್ರಮವಾಗಿ ಸ್ಕ್ಯಾನಿಂಗ್ ಮೂಲಕ ಪತ್ತೆ ಮಾಡುವುದು, ಆಶಾ ಕಾರ್ಯಕರ್ತರು, ಖಾಸಗಿ ಲ್ಯಾಬ್ ಟೆಕ್ನಿಷಿಯನ್ಸ್‌ಗಳ ಮೂಲಕ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಮಾಡುತ್ತಿರುವ ಬಗ್ಗೆ ಹಾಗೂ ಸಹಕರಿಸುತ್ತಿದ್ದವರ ಮೇಲೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು ಎಂದು ವಿವರಿಸಿದರು.

ಪಾಂಡವಪುರದ ಆರೋಗ್ಯ ಇಲಾಖೆ ವಸತಿಗೃಹದಲ್ಲಿ ಗ್ರೂಪ್ ಡಿ ಮಹಿಳಾ ನೌಕರೆ ಅಶ್ವಿನಿ ಅವರ ಮನೆಯಲ್ಲಿ ನಡೆದಿದ್ದ ಪ್ರಕರಣದಲ್ಲಿ 19 ಆರೋಪಿಗಳ ಪೈಕಿ 12 ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ಏಳು ಆರೋಪಿಗಳು ತಲೆಮರಸಿಕೊಂಡಿದ್ದರು, ಮೇಲುಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣದಲ್ಲಿ ಏಳು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು, ನಾಲ್ವರು ತಲೆಮರಸಿಕೊಂಡಿದ್ದರು ಎಂದರು.

ಆರೋಪಿ ಅಭಿಷೇಕ್

ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣುಭ್ರೂಣ ತಪಾಸಣೆ ಮಾಡಲು ತೆರಳುತ್ತಿದ್ದಾಗ ದಾಳಿ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿತ್ತು. ಮತ್ತೋರ್ವ ನಾಪತ್ತೆಯಾಗಿದ್ದನು, ಅದೇ ರೀತಿ ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕರಣ ಹಾಗೂ ಬೆಂಗಳೂರು ನಗರದ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದರು.

ಈ ಎಲ್ಲಾ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆ ಸಂಬಂಧ ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು. ತಂಡ ಕಾರ್ಯಾಚರಣೆ ನಡೆಸು ಪ್ರಮುಖ ಆರೋಪಿಗಳಾದ ಅಭಿಷೇಕ್ ಮತ್ತು ವಿರೇಶ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರಿಂದ ಪ್ರಕರಣದಲ್ಲಿ ಭಾಗಿಯಾಗಿರುವ ಇತರ 10 ಆರೋಪಿಗಳಾದ ಪುಟ್ಟರಾಜು, ಕುಮಾರ್, ಶಾರದಮ್ಮ, ದಾಸೇಗೌಡ, ಲ್ಯಾಬ್ ಸತ್ಯ, ಮೀನಾ, ಮಲ್ಲಿಕಾರ್ಜುನ್, ಸೋಮಶೇಖರ್, ರತ್ನಮ್ಮ, ಪ್ರೇಮ ಆಲಿಯಾಸ್ ಪಾರ್ವತಿರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.

ಬಂಧಿತರಿಂದ ಅಕ್ರಮವಾಗಿ ಕೃತ್ಯಕ್ಕೆ ಉಪಯೋಗಿಸಿದ ಎರಡು ಸ್ಕ್ಯಾನಿಂಗ್ ಉಪಕರಣವನ್ನು, ಮಾರುತಿ ಎಸ್-ಕ್ರಾಸ್, ಮಾರುತಿ ಸಿಲಾರಿಯೋ ಮತ್ತು ಮಾರುತಿ ಒಮ್ಮಿ ಕಾರು ಹಾಗೂ ಮೂರು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅದೇ ರೀತಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಕೆಲವರು ತಲೆ ಮರೆಸಿಕೊಂಡಿದ್ದು, ಇವರ ಪತ್ತೆ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದರು.

ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ತಂಡಕ್ಕೆ ಇಲಾಖೆಯಿಂದ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!