ಕೆ. ಆರ್.ಪೇಟೆ ತಾಲ್ಲೂಕಿನ ಸಿಂಗಾಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಮತ ಪ್ರಚಾರ ನಡೆಸುತ್ತಿದ್ದ ಸಿಂಗಪುರ ಗ್ರಾಮದ ಈರೇಗೌಡರ ಪುತ್ರ ಬಲರಾಮ್ ಮೇಲೆ ಜೆಡಿಎಸ್ ಕಾರ್ಯಕರ್ತರಾದ ಹರೀಶ್, ಮಂಜೇಗೌಡ, ಕಾರ್ತಿಕ್, ಬೋರೇಗೌಡ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ. ಆರ್. ಪೇಟೆ ತಾಲ್ಲೂಕಿನ ಸಿಂಗಪುರ ಗ್ರಾಮದ ಈರೇಗೌಡರ ಪುತ್ರ ಮೊಗಣ್ಣಗೌಡ ಈತನ ಪುತ್ರ ಬಲರಾಮ್ ಹಲ್ಲೆಗೊಳಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಲರಾಮ್ ಮತ್ತು ಮೊಗಣ್ಣಗೌಡ ಸಿಂಗಪುರ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ್ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾತ ಯಾಚನೆಯಲ್ಲಿ ತೊಡಗಿದ್ದರು. ಈ ವೇಳೆ ಅವರ ಬಳಿ ಆಗಮಿಸಿದ ಗ್ರಾಮದ ಜೆಡಿಎಸ್ ಕಾರ್ಯಕರ್ತರಾದ ಹರೀಶ್, ಮಂಜೇಗೌಡ, ಕಾರ್ತಿಕ್ ಮತ್ತು ಬೋರೇಗೌಡ ಅವರು ಗುಂಪುಗೂಡಿ ಇದುವರೆಗೂ ಯಾರು ಗ್ರಾಮದಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ನಡೆಸಿಲ್ಲ, ನೀವು ಕಾಂಗ್ರೆಸ್ ಪರ ಪ್ರಚಾರ ಮಾಡಬಾರದು ಎಂದು ನಮ್ಮ ಬಳಿಯಿದ್ದ ಕರಪತ್ರ ಹಾಗೂ ಗ್ಯಾರಂಟಿ ಕಾರ್ಡುಗಳನ್ನು ಕಿತ್ತೆಸೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿ ಕಲ್ಲು ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹಳ್ಳೆಗೊಳಗಾಗಿರುವ ಗಾಯಾಳುಗಳಾದ ಬಲರಾಮ್ ಮತ್ತು ಮೊಗಣ್ಣಗೌಡ ತಿಳಿಸಿದ್ದಾರೆ.
ಹಲ್ಲೆಯಿಂದ ಬಲರಾಮ್ ತಲೆಗೆ ಹಾಗೂ ಅವರ ತಂದೆ ಮೊಗಣ್ಣಗೌಡ ಅವರ ಕಾಲಿಗೆ ಪೆಟ್ಟಾಗಿದೆ. ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ವಿಷಯ ತಿಳಿದ ಕೂಡಲೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಕಾಂಗ್ರೆಸ್ ಮುಖಂಡರಾದ ಬಿ.ಎಲ್. ದೇವರಾಜು, ಕೊಡಿಮಾರನಹಳ್ಳಿ ದೇವರಾಜು, ಶೀಳನೆರೆ ಅಂಬರೀಶ್, ಚಿನಕುರಳಿ ರಮೇಶ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರಾದ ಬಲರಾಮ್ ಹಾಗೂ ಮೊಗಣ್ಣಗೌಡರ ಆರೋಗ್ಯ ವಿಚಾರಿಸಿ ಉತ್ತಮ ಚಿಕಿತ್ಸೆ ಕೊಡಿಸುವಂತೆ ವೈದ್ಯರಿಗೆ ಸೂಚಿಸಿದರು.
ಖಂಡನೀಯ
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಜೆಡಿಎಸ್ ಕಾರ್ಯಕರ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ಹಲ್ಲೆ ಘಟನೆ ಖಂಡಿಸಿದ್ದಾರೆ.ಕೆ.ಆರ್.ಪೇಟೆಯ ಜನ ಶಾಂತಿ ಪ್ರಿಯರು.ಆದರೆ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವ ಮೂಲಕ ಹಿಂಸಾಚಾರದಿಂದ ಚುನಾವಣೆ ನಡೆಸಲು ಹೊರಟಿದ್ದಾರೆ.ಶಾಸಕ ಮಂಜುರವರು ಈ ಬಗ್ಗೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಇವರೇ ಈ ಹಲ್ಲೆಗೆ ಕುಮ್ಮಕ್ಕು ನೀಡುತ್ತಿದ್ದರೆ ಎಂದರ್ಥವಾಗುತ್ತದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಒಂದು ಪಕ್ಷದ ಪರವಾಗಿ ಪ್ರಚಾರ ಮಾಡಬಹುದು.ಆದರೆ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಬೇಡಿ ಎಂದರೆ ಗೂಂಡಾಗಿರಿ ಆಗುತ್ತದೆ.ಕಾಂಗ್ರೆಸ್ ಪಕ್ಷ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.