ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅರ್ಜುನನ ಸೇವೆಯನ್ನು ಪರಿಗಣಿಸಿ ಪ್ರತಿ ವರ್ಷ ಮೈಸೂರು ದಸರೆಯಲ್ಲಿ ಮಾವುತರಿಗೆ “ಅರ್ಜುನ”ನ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅರ್ಜುನ ಆನೆಗೂ ಮೈಸೂರಿಗೂ ಅವಿನಾಭಾವ ಸಂಬಂಧ ಇದೆ. ಅಲ್ಲದೆ, ದಸರಾ ಜಂಬೂ ಸವಾರಿ ವೇಳೆ ಅರ್ಜುನನ ಕೊಡುಗೆ ಸಾಕಷ್ಟು ಇದೆ. ಆತ 8 ಬಾರಿ ನಾಡಿನ ಅಧಿದೇವತೆ, ತಾಯಿ ಚಾಮುಂಡೇಶ್ವರಿ ದೇವಿಯ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿದ್ದಾನೆ. ರಾಜ ಗಾಂಭೀರ್ಯದಿಂದ ಕಾರ್ಯ ನಿರ್ವಹಿಸಿದ್ದಾನೆ ಎಂದು ಅರ್ಜುನನ ಕಾರ್ಯವೈಖರಿ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದಸರಾ ಮಾತ್ರವಲ್ಲದೆ ನೂರಾರು ಕಾಡಾನೆ ಕಾರ್ಯಾಚರಣೆಯಲ್ಲೂ ಭಾಗಿಯಾಗಿದ್ದಾನೆ. ಆಗ ಸಾಕಷ್ಟು ಸಂದರ್ಭದಲ್ಲಿ ಇತರ ಆನೆಗಳು, ಆನೆಯ ಮಾವುತರು, ಕಾವಾಡಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಅಪಾಯಕ್ಕೆ ಸಿಲುಕಿದ ಸಂದರ್ಭದಲ್ಲಿ ಅವರ ಪ್ರಾಣವನ್ನು ಅರ್ಜುನ ಕಾಪಾಡಿದ್ದಾನೆ ಎಂದು ಅವರು ಸ್ಮರಿಸಿದ್ದಾರೆ.
ಕಳೆದ 23 ವರ್ಷಗಳಿಂದ ಅರ್ಜುನನಿಗೂ ಹಾಗೂ ಮೈಸೂರು ದಸರೆಗೂ ಅವಿನಾಭಾವ ನಂಟು ಇತ್ತು. ಹೀಗಾಗಿ ಅರ್ಜುನನ ಹೆಸರು ಮೈಸೂರಿನ ದಸರೆಯ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವಂತಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರತಿ ವರ್ಷ ಅರ್ಜುನನ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿಯನ್ನು ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.