ಎಂ.ಶ್ರೀನಿವಾಸ್ 72, ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿ, ಎಂ.ಶ್ರೀನಿವಾಸ್ ಸಮಾಜ ಸೇವಾ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಎಂ.ಶ್ರೀನಿವಾಸ್ ಪುರಸ್ಕಾರ ಪ್ರದಾನ ಸಮಾರಂಭವು ಫೆ.2ರಂದು ಸಂಜೆ 4 ಗಂಟೆಗೆ ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಎಂ.ಶ್ರೀನಿವಾಸ್ ಸಮಾಜ ಸೇವಾ ಪ್ರಶಸ್ತಿಯನ್ನು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಅರಸಮ್ಮ ಮೆಣಸೇಗೌಡ ಪ್ರಶಸ್ತಿಯನ್ನು ಸಾವಯವ ಕೃಷಿಕ ಹಳೇ ಬೂದನೂರು ವಿಕಾಸ್ ಹಾಗೂ ಎಂ.ಶ್ರೀನಿವಾಸ್ ವಿಶೇಷ ಪುರಸ್ಕಾರವನ್ನು ಪ್ರಖ್ಯಾತ ನರರೋಗ ತಜ್ಞ ಡಾ.ನವೀನ್ ಅಪ್ಪಾಜಿಗೌಡ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.
ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಮ್ ರಾಯಪುರ ಸಮಾರಂಭ ಉದ್ಘಾಟಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಸ್ತಿ ಪ್ರದಾನ ಮಾಡುವರು, ಶಾಸಕ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಅಭಿನಂದನಾ ನುಡಿ ನುಡಿಯುವರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬಿ.ರಾಮಕೃಷ್ಣ ಭಾಗವಹಿಸುವರು. ಶಾಸಕ ಎಂ.ಶ್ರೀನಿವಾಸ್, ಪ್ರೊ.ಜಯಪ್ರಕಾಶಗೌಡ, ಎಂ.ಶ್ರೀನಿವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಿ.ಶಿವರಾಜು ಕೀಲಾರ ಭಾಗವಹಿಸುವರು ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಡಿ.ಶಿವರಾಜು ಕೀಲಾರ, ತಗ್ಗಹಳ್ಳಿ ವೆಂಕಟೇಶ್, ಹೆಚ್.ಬಿ.ನಾಗಪ್ಪ ಹನಕೆರೆ, ತಿಮ್ಮೇಗೌಡ ಉಪಸ್ಥಿತರಿದ್ದರು.