ಕರ್ನಾಟಕದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕಗೊಳಿಸಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಪ್ರಕಟಣೆ ಹೊರಡಿಸಿದ್ದಾರೆ.
ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರರಾಗಿರುವ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಶುಕ್ರವಾರ, ತಕ್ಷಣಕ್ಕೆ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರಕಟಣೆಯ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ವಿಜಯೇಂದ್ರ ಅವರ ಆಯ್ಕೆಯೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ಕೊನೆಗೂ ತೆರೆ ಬಿದ್ದಂತಾಗಿದೆ. ವಿಜಯೇಂದ್ರ ಪ್ರಸ್ತುತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತಾದರೂ, ಅಂತಿಮವಾಗಿ ಇದೀಗ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರನಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಮಣೆ ಹಾಕಿದೆ. ರಾಜ್ಯದ ರಾಜಕೀಯದಲ್ಲಿ ತನ್ನ ವರ್ಚಸ್ಸು ಇನ್ನೂ ಇದೆ ಎಂಬ ಸ್ಪಷ್ಟ ಸಂದೇಶವನ್ನು ಪಕ್ಷದೊಳಗೆ ತನ್ನ ವಿರುದ್ಧ ಮಸಲತ್ತು ಮಾಡಿದವರಿಗೆ ತೋರಿಸಿಕೊಟ್ಟಿದ್ದಾರೆ.