ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಸಮಸ್ಯೆ ತಲೆದೂರುತ್ತಿದೆ, ಇದಕ್ಕೆ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ, ಎಲ್ಲಾ ಪಕ್ಷಗಳು ರಾಜಕೀಯ ಬದಿಗಿಟ್ಟು ಕಾವೇರಿ ನೀರಿನ ಸಂಕಷ್ಟ ಬಗೆಹರಿಸಿ ರೈತರ ಪರ ನಿಲ್ಲಬೇಕೆಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಆಗ್ರಹಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿ ಇಟ್ಟುಕೊಂಡು ರಾಜಕೀಯ ಮಾಡದೆ ಎಲ್ಲಾ ಪಕ್ಷಗಳು ರಾಜಕೀಯ ಬದಿಗಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ, ಸರ್ವ ಪಕ್ಷಗಳ ಸಭೆಯಲ್ಲಿ ನಾಡಿನ ರೈತರ ಹಿತ ಕಾಯುವ ಕೆಲಸ ಆಗಬೇಕಾಗಿದೆ ಎಂದರು.
ಸರ್ವೋಚ್ಚ ನ್ಯಾಯಾಲಯಕ್ಕೆ ಕಾವೇರಿ ಜಲಾನಯನ ಪ್ರದೇಶದ ಸತ್ಯದ ಪರಿಸ್ಥಿತಿ ಮನವರಿಕೆ ಮಾಡಿಕೊಡುವ ಜವಾಬ್ದಾರಿ ಸರ್ಕಾರ ಮತ್ತು ವಿರೋಧ ಪಕ್ಷಗಳಿಗೆ ಸೇರಿದೆ. ಈಗಾಗಲೇ 65 ಕ್ಕೂ ಹೆಚ್ಚು ಟಿಎಂಸಿ ನೀರು ಹರಿದಿದೆ. ರೈತರು, ಕನ್ನಡ ಪರ ಸಂಘಟನೆಗಳ ಹೋರಾಟ ನಂತರ ಸರ್ಕಾರಕ್ಕೆ ಜ್ಞಾನೋದಯವಾಗಿದೆ ಎಂದು ಹೇಳಿದರು.
ಕಾವೇರಿ ಉಗಮ ಸ್ಥಾನ ತಲಕಾವೇರಿ, ಕೊಡಗು ಹಾಗೂ ಕೇರಳದಲ್ಲಿ ಈ ಬಾರಿ ಉತ್ತಮ ಮಳೆಯಾಗಿಲ್ಲ, ಕಳೆದ ವರ್ಷ ಕೆ ಆರ್ ಎಸ್, ಕಬಿನಿ ಸೇರಿ ಎಲ್ಲಾ ಜಲಾಶಯಗಳು ಭರ್ತಿಯಾಗಿದ್ದವು, ಈಗ ಮಳೆ ಕೊರತೆಯಿಂದ ಜಲಾಶಯಗಳು ತುಂಬಿಲ್ಲ, ಹೀಗಿರುವಾಗ ನೀರು ಹರಿಸುವುದು ಸರಿಯಲ್ಲ, ಸಂಕಷ್ಟದ ಸ್ಥಿತಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಸೈನ್ಯ ರಾಜ್ಯ ಸಂಚಾಲಕ ಎಸ್.ಶಿವಕುಮಾರ್, ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಬಿ ಶಿವಕುಮಾರ್ ಮೈಸೂರು, ರಾಜ್ಯ ಸಮಿತಿ ಸದಸ್ಯರಾದ ಆರಾಧ್ಯ ಗುಡಗೇನಹಳ್ಳಿ,ಥಾಮಸ್ ಬೆಂಜಮಿನ್ ಮತ್ತಿತರರಿದ್ದರು.