ಮೇ 3ರಂದು ನಡೆಯಲಿರುವ ಸಮಾಜ ಸುಧಾರಕ ಬಸವಣ್ಣನವರ ಜಯಂತಿಯನ್ನು ತಾಲ್ಲೂಕು ಆಡಳಿತದ ವತಿಯಿಂದ ವಿಜೃಂಭಣೆಯಿಂದ ಆಚರಿಸಲು ನಿರ್ಧಾರ ಮಾಡಿದ್ದು, ಜಾತ್ಯಾತೀತವಾಗಿ ಎಲ್ಲರೂ ಕೈ ಜೋಡಿಸಿ ಯಶಸ್ವಿಗೊಳಿಸಬೇಕೆಂದು ಶಾಸಕ ಡಾ.ಕೆ ಅನ್ನದಾನಿ ತಿಳಿಸಿದರು.
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಬಸವ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲ್ಲೂಕು ಆಳಿತದ ವತಿಯಿಂದ ನಡೆಯುವ ರಾಷ್ಟ್ರೀಯ ಹಬ್ಬಗಳಲ್ಲಿ ಪ್ರತಿಯೊಬ್ಬ ತಾಲ್ಲೂಕು ಅಧಿಕಾರಿಗಳು ಭಾಗವಹಿಸಬೇಕು, ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ಮಾಡಬೇಕು. ಬೇಜವಬ್ದಾರಿ ವಹಿಸಿದರೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಾಜಿ ಯೋಧ ಸುರೇಶ್ ಮಾತನಾಡಿ, ಬಸವ ಜಯಂತಿ ಕಾರ್ಯಕ್ರಮವನ್ನು ಜತ್ಯಾತೀತ ಮತ್ತು ಪಕ್ಷಾತೀತವಾಗಿ ಅದ್ದೂರಿಯಾಗಿ ಆಚರಿಸಬೇಕು, ಬಸವಣ್ಣನವರು ಒಂದು ಜಾತಿಗೆ ಸೀಮಿತವಾಗಿಲ್ಲ, 12ನೇ ಶತಮಾನದಲ್ಲಿ ಸಂವಿಧಾನದ ಕಲ್ಪನೆಯನ್ನು ಕಟ್ಟಿಕೊಟ್ಟಿದ್ದರು.
ಎಲ್ಲಾ ಸಮುದಾಯದವರು ಸೇರಿ ಅದ್ದೂರಿ ಆಚರಣೆಗೆ ಕೈಜೋಡಿಸಬೇಕು, ಪಟ್ಟಣದ ಒಂದು ಸ್ಥಳವನ್ನು ಆಯ್ಕೆಮಾಡಿಕೊಂಡು ಅನ್ನದಾನ ಮಾಡಲು ಮುಂದಾಗಬೇಕು,ಕರೋನ 4ನೇ ಅಲೆ ಬರುವ ಮುನ್ಸೂಚನೆ ಇರುವುದರಿಂದ ಮುನ್ನೆಚರಿಕೆ ವಹಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ವಿಜಯಣ್ಣ, ತಾಲ್ಲೂಕು ಪಂಚಾಯಿತಿ ಇಓ ರಾಮಲಿಂಗಯ್ಯ, ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.