ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಸೆ.12 ರಿಂದ ನೀರು ಹರಿಸಲು ಸಾಧ್ಯ ಇಲ್ಲ ಎಂದು ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದು, ಅದೇ ನಿಲುವಿಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧ ವಾಗಿರಬೇಕೆಂದು ಬಿಜೆಪಿ ನಾಯಕ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಡ್ಯ ನಗರದಲ್ಲಿ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿದ್ದ ಕಾವೇರಿ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಸಂಸತ್ತಿನಲ್ಲಿ ದನಿ ಎತ್ತುವಂತೆ ಬಿಜೆಪಿ ಸಂಸದರಿಗೆ ಸೂಚಿಸಲಾಗಿದೆ, ಅವರು ರಾಜ್ಯದ ರೈತರ ಹಿತ ಕಾಪಾಡಲು ಮುಂದಾಗಲಿದ್ದಾರೆ ಎಂದರು.
ಮೇಕೆದಾಟು ಯೋಜನೆಗೆ ಬೆಂಬಲ
ಮೇಕೆದಾಟು ಯೋಜನೆ ಜಾರಿಗೆ ಹೋರಾಟ ನಡೆಸಲು ಬಿಜೆಪಿ ಸಿದ್ಧ, ಶಾಶ್ವತ ಪರಿಹಾರ ರೂಪಿಸುವ ಯೋಜನೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ, ಮೇಕೆದಾಟು ವಿಚಾರದಲ್ಲಿ ತ್ವರಿತ ಕ್ರಮ ಅಗತ್ಯವಾಗಿದೆ ಎಂದರು.
ಕಾವೇರಿ ನದಿ ನೀರು ಮತ್ತು ಮೇಕೆದಾಟು ವಿಚಾರದಲ್ಲಿ ರೈತರು ನಿರಂತರ ಹೋರಾಡುತ್ತಾ ಬಂದಿದ್ದಾರೆ, ಕಾವೇರಿ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿರುವ ರೈತ ಹಿತ ರಕ್ಷಣಾ ಸಮಿತಿ ಜೊತೆ ಬಿಜೆಪಿ ಇರುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಆರ್.ಅಶೋಕ್, ಅಶ್ವಥ್ ನಾರಾಯಣ್, ಗೋವಿಂದ ಕಾರಜೋಳ, ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್ ಮತ್ತಿತರರಿದ್ದರು.