ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರು ಚಂದನವನಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳಾಗಿರುವ ಹಿನ್ನಲೆಯಲ್ಲಿ ಬೆಳ್ಳಿ ಪರ್ವ ಡಿ-25′ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಫೆ. 17ರ ಶನಿವಾರ ಸಂಜೆ 5 ಗಂಟೆಗೆ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಗಳು, ಬೇಬಿ ಮಠದ ಶ್ರೀಗಳು,ಪ್ರಕಾಶನಾಥ ಸ್ವಾಮೀಜಿ,ವಿನಯ್ ಗುರೂಜಿ ಸೇರಿದಂತೆ ಹಲವು ಮಠಾಧೀಶರು ಆಗಮಿಸಿ ನಟ ದರ್ಶನ್ ಅವರನ್ನು ಆಶೀರ್ವದಿಸಲಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು,ದರ್ಶನ್ ತೂಗದೀಪ ಅವರನ್ನು ಸನ್ಮಾನಿಸಲಿದ್ದಾರೆ ಎಂದರು.
ಬಳಿಕ ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರಿಂದ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ. ವಿನೋದ್ ರಾಜ್ ಕುಮಾರ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ, ಅಭಿಷೇಕ್ ಅಂಬರೀಶ್, ಧನ್ವಿರ್, ಚಿಕ್ಕಣ್ಣ,ಜೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಚಿತ್ರರಂಗದ ಸಾಕಷ್ಟು ನಟ, ನಟಿಯರು ಭಾಗವಹಿಸಲಿದ್ದು,ಹಾಡು, ಸಂಗೀತ, ನೃತ್ಯ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿ ಕೊಡಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ಜನರಿಗೆ ಮುಕ್ತ ಪ್ರವೇಶವಿದ್ದು,ಸುಮಾರು 25 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.ಮಂಡ್ಯದಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡಲು ಆಸೆಯಿತ್ತು.ಆದರೆ ಕ್ರೀಡಾಂಗಣದ ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ ಸ್ಥಳಾವಕಾಶ ದೊಡ್ಡದಿರುವ ಕಾರಣಕ್ಕೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸನ್ನಿಧಿಯಲ್ಲಿ ಕಾರ್ಯಕ್ರಮ ನಡೆಸುತ್ತಿದ್ದೇವೆ.ಜಿಲ್ಲೆಯ ಜನರು ಬಂದು ನಟ ದರ್ಶನ್ ಅವರಿಗೆ ಶುಭ ಕೋರಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಭೂತನ ಹೊಸೂರು ಗ್ರಾ.ಪಂ.ಮಾಜಿ ಅಧ್ಯಕ್ಷ ರಾಮಚಂದ್ರು, ಬೇಲೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಸಂಜಯ್, ಬೇವಿನಹಳ್ಳಿ ಗ್ರಾ.ಪಂ.ಅಧ್ಯಕ್ಷ ಮಹೇಶ್, ಯುವ ಮುಖಂಡ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.