ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಬುಧವಾರ ವಿಚಾರಣೆ ಶುಕ್ರವಾರಕ್ಕೆ (ಮೆ 31ಕ್ಕೆ) ವಿಚಾರಣೆ ಮತ್ತೆ ಮುಂದೂಡಿದರು.
“ನನ್ನ ಕಕ್ಷಿದಾರರು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಆದರೂ ಅವರಿಗೆ ನೊಟೀಸ್ ಅನ್ನು ನೀಡಲಾಗಿದೆ. ಇದೇ ಪ್ರಕರಣದಲ್ಲಿ ಬಂಧಿಸುವ ಆತಂಕವೂ ಇದೆ. ಈ ಕಾರಣದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದ್ದು, ಇದನ್ನು ಕೂಡಲೇ ಪರಿಗಣಿಸಬೇಕು” ಎಂದು ಭವಾನಿ ರೇವಣ್ಣ ಪರ ವಕೀಲರು ವಾದಿಸಿದರು. ಎಸ್ಐಟಿಯ ಪ್ರತಿವಾದವನ್ನೂ ಆಲಿಸಿದ ನ್ಯಾಯಮೂರ್ತಿಗಳು ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದಾರೆ.
ಸಂತ್ರಸ್ತ ಮಹಿಳೆ ಅಪಹರಣ ಕೇಸ್ ನಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಸೋಮವಾರ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು. ಆ ವೇಳೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಗುರುವಾರ ಅಥವಾ ಶುಕ್ರವಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದರು. ಬಳಿಕ ನ್ಯಾಯಾಲಯ ಬುಧವಾರಕ್ಕೆ ವಿಚಾರಣೆ ಮುಂದೂಡಿತ್ತು.
ಎಸ್ಐಟಿ ಅರ್ಜಿ
ಕೆ ಆರ್ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಚ್ ಡಿ ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿ ಅರ್ಜಿ ಸಲ್ಲಿಸಿದೆ. ಮೇ 31 ರಂದು ಎಸ್ಐಟಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಬಂಧನಕ್ಕೊಳಗಾಗಿದ್ದ ರೇವಣ್ಣಗೆ ಸೆಷನ್ಸ್ ಕೋರ್ಟ್ ಜಾಮೀನು ನೀಡಿತ್ತು. ಇದೀಗ ಜಾಮೀನು ರದ್ದು ಕೋರಿ ಎಸ್ಐಟಿ ಹೈಕೋರ್ಟ್ ಮೆಟ್ಟಿಲೇರಿದೆ.
ಹೈಕೋರ್ಟಿಗೆ ರೇವಣ್ಣ ಅರ್ಜಿ
ಈ ನಡುವೆ ಎಚ್ ಡಿ ರೇವಣ್ಣ ವಿರುದ್ಧ ಈವರೆಗೆ 2 ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಎರಡೂ ಪ್ರಕರಣ ರದ್ದು ಕೋರಿ ಹೈಕೋರ್ಟ್ಗೆ ಎಚ್ ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಹೊಳೆನರಸೀಪುರ, ಕೆ.ಆರ್.ನಗರ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಹುರುಳಿಲ್ಲ, ರಾಜಕೀಯ ಪ್ರೇರಿತವೆಂದು ಅವರು ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಪ್ರಜ್ವಲ್ ರೇವಣ್ಣ ಆಗಮನ
ಈ ಎಲ್ಲ ಬೆಳವಣಿಗೆಗಳ ನಡುವೆ ಪ್ರಜ್ವಲ್ ರೇವಣ್ಣ ಮೇ 31ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜರ್ಮನಿಯಿಂದ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದುಕೊಳ್ಳಲು ಎಸ್ಐಟಿ ಅಧಿಕಾರಿಗಳು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಿದ್ದಾರೆ.