ಬಿಜೆಪಿ ಸರ್ಕಾರ ಜನ-ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಇಂತಹ ಜನವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಯುವ ಮುಖಂಡ ಸಚಿನ್ ಚಲುವರಾಯಸ್ವಾಮಿ ಮನವಿ ಮಾಡಿದರು.
ಮದ್ದೂರು ತಾಲ್ಲೂಕಿನ ಕೊಪ್ಪ ಹೋಬಳಿಯ ಬಿದರಕೋಟೆ, ಮರಳಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ತೆರಳಿ ಯುವ ಸಮಾವೇಶ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.
ನಾಗಮಂಗಲ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಅಭಿವೃದ್ಧಿಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ನಾಗಮಂಗಲ ಕ್ಷೇತ್ರದಲ್ಲಿ ಯುವ ಸಮಾವೇಶ, ಮಹಿಳಾ ಸಮಾವೇಶ ಮಾಡುವ ಮೂಲಕ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಜತೆಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಶಕ್ತಿ ಮೀರಿ ಶ್ರಮಿಸುತ್ತಿರುವುದಾಗಿ ಹೇಳಿದರು.
ಕಾಂಗ್ರೆಸ್ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಯುವಕರನ್ನು ಸಂಘಟಿಸುವ ಜೊತೆಗೆ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಬಲತುಂಬಲು ಮುಂದಾಗಿದೆ. ಚಲುವರಾಯಸ್ವಾಮಿ ಅವರು ಮಾಡಿರುವ ಯೋಜನೆಗಳನ್ನು ರೂಪಿಸಿ ಗೆಲುವಿಗೆ ನಿರಂತರವಾಗಿ ಶ್ರಮಿಸುವುದಾಗಿ ಹೇಳಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ ಮಾತನಾಡಿ, ಕೊಪ್ಪ ಹೋಬಳಿಯ ಎಂಟು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಪಕ್ಷವನ್ನು ಸಂಘಟಿಸಬೇಕೆಂಬ ಸದುದ್ದೇಶದಿಂದ ಗ್ರಾಮಗಳಿಗೆ ತೆರಳಿ ಯುವ ಪಡೆಯನ್ನು ರಚನೆ ಮಾಡುತ್ತಿದ್ದು, ಈಗಿನಿಂದಲೇ ಕಾರ್ಯ ಯೋಜನೆ ರೂಪಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ಹೇಳಿದರು.
ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಪಕ್ಷ ಸಂಘಟಿಸುವ ಜೊತೆಗೆ ಭಿನ್ನಾಭಿಪ್ರಾಯಗಳು ಇರುವ ಮುಖಂಡರೊಂದಿಗೆ ಚರ್ಚಿಸಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಯೋಜನೆ ರೂಪಿಸಿರುವುದಾಗಿ ತಿಳಿಸಿದರು.
ಈ ವೇಳೆ ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿವಾಕರ್, ಯೂಥ್ ಘಟಕದ ಅಧ್ಯಕ್ಷ ಚೇತನ್, ಶರತ್,ವರುಣ್ ಗೌಡ, ಸ್ಥಳೀಯ ಯುವ ಮುಖಂಡರಾದ ಚೇತನ್, ಮನು, ಪ್ರಶಾಂತ್, ನಿತಿನ್, ಸಾಗರ್, ಪ್ರಶಾಂತ್, ಸೋಮು, ಪ್ರಜ್ವಲ್ ಇತರರಿದ್ದರು