Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಹಿಂದುಳಿದ ವರ್ಗಗಳ ಹಿತಕಾಯುವ ಪಕ್ಷ

ದೇಶದ ಜನಸಂಖ್ಯೆಯಲ್ಲಿ ಶೇ. 50ಕ್ಕೂ ಹೆಚ್ಚು ಜನರು ಹಿಂದುಳಿದ ವರ್ಗಕ್ಕೆ ಸೇರಿದ್ದು, ಬಿಜೆಪಿ ಸರ್ಕಾರ ಅವರ ಹಿತ ಕಾಯುವ ಏಕೈಕ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಒಬಿಸಿ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದರು.

ಮಂಡ್ಯದ ಸುಭಾಷ್ ನಗರದಲ್ಲಿರುವ ಬಿಜೆಪಿ ವಿಕಾಸ ಭವನದಲ್ಲಿ ನಡೆದ ಒಬಿಸಿ ಜಿಲ್ಲಾ ಕಾರ್ಯಕಾರಿಣಿ ವಿಶೇಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,ಕೇಂದ್ರ ಮತ್ತು ಕೆಲವು ರಾಜ್ಯಗಳಲ್ಲಿ ಹಿಂದುಳಿದ ವರ್ಗದ ಜನರ ಬೆಂಬಲದಿಂದ ಬಿಜೆಪಿ ಗೆಲುವು ಸಾಧಿಸಿದೆ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಒಬಿಸಿ ವರ್ಗದ ಜನರೇ ನಿರ್ಣಾಯಕ ಪಾತ್ರ ವಹಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ದೇಶದಲ್ಲಿ 130 ಕೋಟಿಗೂ ಹೆಚ್ಚಿನ ಜನಸಂಖ್ಯೆ ಇದೆ. ಇದರಲ್ಲಿ ಶೇ.50ಕ್ಕೂ ಹೆಚ್ಚು ಮಂದಿ ಹಿಂದುಳಿದ ವರ್ಗದ ಜನರಿದ್ದಾರೆ. ಬೇರೆ ಪಕ್ಷದವರು ಹಿಂದುಳಿದವರನ್ನು ಕೇವಲ ಮತಬ್ಯಾಂಕ್ ಆಗಿ ಮಾತ್ರ ಬಳಸಿಕೊಳ್ಳುತ್ತಿದ್ದರು. ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ 27 ಮಂದಿ ಒಬಿಸಿ ಸಚಿವರಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿನಲ್ಲಿ ಒಬಿಸಿ ಪಾತ್ರ ಅತಿ ಮುಖ್ಯವಾಗಿತ್ತು. ಹೀಗಾಗಿ ಅಲ್ಲೂ ಸಹ 28 ಮಂದಿ ಸಚಿವರು ಯೋಗಿ ಸಂಪುಟದಲ್ಲಿ ಇದ್ದಾರೆ ಎಂದು ವಿವರಿಸಿದರು.

ನಮ್ಮ ಕಾರ‍್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಈ ನಿಟ್ಟಿನಲ್ಲಿ ಪಕ್ಷವನ್ನು ಸಂಘಟನೆ ಮಾಡುವುದ ರೊಂದಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಶಾಸಕರು ಗೆಲ್ಲುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಮಂಡ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಶಾಸಕರು, ಸಂಸದರು ಇಲ್ಲ ಎಂಬ ಅಪವಾದವಿದೆ. ಮುಂದಿನ ದಿನಗಳಲ್ಲಿ ನಮ್ಮ ಕಾರ‍್ಯಕರ್ತರು ಇದನ್ನು ಸವಾಲಾಗಿ ತೆಗೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಜನಪ್ರತಿನಿಧಿಗಳನ್ನು ಗೆಲ್ಲಿಸುವ ಮೂಲಕ ಅಪವಾದವನ್ನು ದೂರಮಾಡಬೇಕು. ಮಂಡ್ಯದಲ್ಲೂ ಸಹ 4 ರಿಂದ 5 ಲಕ್ಷ ಮಂದಿ ಹಿಂದುಳಿದ ವರ್ಗದ ಜನರಿದ್ದಾರೆ. ಚುನಾವಣೆಗಳಲ್ಲಿ ನಾವು ನಿರ್ಣಾಯಕ ಎಂಬುದನ್ನು ಸಾಬೀತು ಪಡಿಸುವಂತೆ ಕರೆ ನೀಡಿದರು.

ಪ್ರಸ್ತುತ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಕಳೆದ ಬಾರಿ ನಮ್ಮ ಅಭ್ಯರ್ಥಿ ಕೇವಲ 186 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಅವರನ್ನು ಗೆಲ್ಲಿಸಿ ಕಳುಹಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಆ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಹೇಳಿದರು.

ರಾಜ್ಯ ಪರಿಷತ್ ಸದಸ್ಯ ಡಾ. ಸಿದ್ದರಾಮಯ್ಯ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಬಿ. ರಮೇಶ್, ಮೈಸೂರು ವಿಭಾಗೀಯ ಸಂಘಟನಾ ಕಾರ‍್ಯದರ್ಶಿ ಕುಮಾರಸ್ವಾಮಿ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು, ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಬಿ.ಎಸ್.ನಾಗರಾಜು, ನವೀನ್ ಕುಮಾರ್, ಎಂ.ಸಿ. ಸಿದ್ದು, ಎಲ್.ಎಸ್. ಸಿದ್ದರಾಜು, ಮಳವಳ್ಳಿ ಒಬಿಸಿ ಮೋರ್ಚಾ ಅಧ್ಯಕ್ಷ ನಿಂಗರಾಜು ಸೇರಿದಂತೆ ಹಲವರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!