ಇತ್ತೀಚೆಗೆ ತಾಲ್ಲೂಕು ಬಿಜೆಪಿ ಆಯೋಜಿಸಿದ್ದ ಬೃಹತ್ ಮಹಿಳಾ ಸಮಾವೇಶದಲ್ಲಿ ನೆರೆದಿದ್ದ ಹತ್ತು ಸಾವಿರಕ್ಕೂ ಹೆಚ್ಚು ಮಹಿಳಾ ಮತದಾರರ ಜನಸ್ತೋಮ ಕಂಡು ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರುಗಳಿಗೆ ಆತಂಕ ಸೃಷ್ಟಿಯಾಗಿದೆ ಎಂದು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾ ತಿಳಿಸಿದರು.
ನಾಗಮಂಗಲ ತಾಲ್ಲೂಕಿನ ಬಿಂಡೇನಹಳ್ಳಿಯ ಮನೆಯಲ್ಲಿ ಮಲ್ಲಿಕಾರ್ಜುನ್ (ಫೈಟರ್ ರವಿ) ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿ ಬೂತ್ ನಿಂದ ಮಹಿಳಾ ಮತದಾರರು ಈ ಸಮಾವೇಶದಲ್ಲಿ ಭಾಗಿಯಾಗಿರುವುದು ಬಿಜೆಪಿಗೆ ಹೆಚ್ಚಿನ ಶಕ್ತಿ ನೀಡಿದೆ. ಮುಂದಿನ ದಿನಗಳಲ್ಲಿ ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಮತ್ತು ಯೋಜನೆಗಳನ್ನು ತಿಳಿಸಿ ಫೈಟರ್ ರವಿಯವರ ಗೆಲುವಿಗಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.
ನಾಗಮಂಗಲ ತಾಲ್ಲೂಕಿನ ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಮಹಿಳೆಯರನ್ನು ಸಂಘಟಿಸಲು ಉತ್ಸಾಹದಿಂದ ಕಾರ್ಯ ಪ್ರವೃತ್ತರಾಗುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಫೈಟರ್ ರವಿ, ತಾಲ್ಲೂಕು ಮಹಿಳಾ ಸಮಾವೇಶದ ಭರ್ಜರಿ ಯಶಸ್ಸು ಮಹಿಳಾ ಕಾರ್ಯಕರ್ತೆಯರಿಗೆ ಸಲ್ಲಬೇಕು. ನಮಗೆ ಗೆಲುವಷ್ಟೆ ಮುಖ್ಯವಾಗಬೇಕು. ಮಹಿಳಾ ಕಾರ್ಯಕರ್ತೆಯರು ಬೃಹತ್ ಸಮಾವೇಶಕ್ಕಾಗಿ ತಮ್ಮ ಅಮೂಲ್ಯವಾದ ಸಮಯವನ್ನು ನೀಡುವುದರ ಜೊತೆ ಹಗಲಿರುಳು ಶ್ರಮಿಸಿದ್ದಾರೆ. ಅವರಿಗೆ ನಾನು ಚಿರ ಋಣಿಯಾಗಿದ್ದೇನೆ. ಮುಂದಿನ ಚುನಾವಣೆಯಲ್ಲಿ ರಾಜ್ಯ ಬಿಜೆಪಿಗೆ ಬಲ ನೀಡಲು ನಮ್ಮ ಗೆಲುವು ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾ, ಪುಟ್ಟಮ್ಮ, ಗೀತಾ, ಶಕುಂತಲಾ, ತಾಯಮ್ಮ ಸೇರಿದಂತೆ ನೂರಾರು ಮಹಿಳೆಯರು ಹಾಗೂ ಅರ್ಜುನ್, ಲಿಖಿತ್, ದಾಸಪ್ಪ, ವಿನೋದ್ ಹಾಜರಿದ್ದರು.