“ ಚನ್ನಪಟ್ಟಣ ವಿಧಾನಸಭಾ ಉಪಚುನಾವಣಾ ಖರ್ಚಿಗೆ ಐವತ್ತು ಕೋಟಿ ರೂಪಾಯಿ ನೀಡುವಂತೆ ಒತ್ತಡ ಹೇರಿ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿ ರಿಯಲ್ ಎಸ್ಟೇಟ್ ಉದ್ಯಮಿ, ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ʼಉಪಾಧ್ಯಕ್ಷʼ ವಿಜಯ್ ಟಾಟಾ, ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿರುವ ವಿಜಯ್ ಟಾಟಾ, “ಉದ್ಯಮಿಯಾಗಿರುವ ನಾನು ವ್ಯವಹಾರಿಕವಾಗಿ ಮುನ್ನಡೆ ಸಾಧಿಸಿದ್ದು, ₹50 ಕೋಟಿ ಹಣ ನೀಡುವಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಡ ಹಾಕುತ್ತಿದ್ದಾರೆ. ಹಣಕ್ಕಾಗಿ ಬೆದರಿಕೆ ಕೂಡಾ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.
ಕುಮಾರಸ್ವಾಮಿ ಜೊತೆಗೆ, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡರ ಹೆಸರನ್ನೂ ತನ್ನ ದೂರಿನಲ್ಲಿ ಉಲ್ಲೇಖಿಸಿರುವ ಟಾಟಾ, “ರಮೇಶ್ ಗೌಡ ಕೂಡ ನನ್ನಿಂದ ಹಣ ವಸೂಲಿ ಮಾಡಲು ಪ್ರಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ವಿಜಯ್ ಟಾಟಾ, ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಮಾಹಿತಿ ನೀಡಿದ್ದರು. “ಕೆಲ ದಿನಗಳ ಹಿಂದೆ ಕುಮಾರಸ್ವಾಮಿ ಆಪ್ತರಾದ ವಿಧಾನ ಪರಿಷತ್ ಪರಿಷತ್ ಮಾಜಿ ಸದಸ್ಯ ರಮೇಶ್ಗೌಡ ಅವರ ಮೊಬೈಲ್ ಮೂಲಕ ಕರೆ ಮಾಡಿ, ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಗೆ ನಿಲ್ಲುತ್ತಿರುವುದರಿಂದ ₹50 ಕೋಟಿ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದರು” ಎಂದು ಆರೋಪ ಮಾಡಿದ್ದರು.
“ಬೇಡಿಕೆ ಇಟ್ಟ ಹಣ ಕೊಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದಕ್ಕೆ, ರಮೇಶ್ ಗೌಡ ಮೂಲಕ ಹಣ ನೀಡಲಿಲ್ಲವೆಂದರೆ ಬೆಂಗಳೂರಿನಲ್ಲಿ ಬದುಕುವುದಕ್ಕೆ ಸಾಧ್ಯವಿಲ್ಲ. ನಿನಗೆ ರಿಯಲ್ ಎಸ್ಟೇಟ್ ವ್ಯಾಪಾರ ಮಾಡುವುದಕ್ಕೆ ಸಾಧ್ಯವಾಗದು ಎಂದು ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ” ಎಂದು ಉದ್ಯಮಿ ಟಾಟಾ ಗಂಭೀರ ಆರೋಪ ಮಾಡಿದ್ದಾರೆ.