ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ದಿನಕ್ಕೊಂದು ಆದೇಶವನ್ನು ನೀಡುವ ಮೂಲಕ ಕಾವೇರಿ ಜಲಾನಯನ ವ್ಯಾಪ್ತಿಯ ಜನರಿಗೆ ಹಾಗೂ ರೈತರಿಗೆ ಮರಣ ಶಾಸನ ಬರೆಯುತ್ತಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಹೋರಾಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕಾವೇರಿ ನೀರಿನ ವಿಚಾರದಲ್ಲಿ ಕನ್ನಡಿಗರನ್ನು ಕೆಣಕುವ ರೀತಿಯಲ್ಲಿ ದಿನಕ್ಕೊಂದು ಆದೇಶವನ್ನು ನೀಡುತ್ತಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕಳೆದ ಹಲವಾರು ದಿನಗಳಿಂದ ಒಗ್ಗಟ್ಟಿನ ಹೋರಾಟ ನಡೆಯುತ್ತಿದ್ದು, ಮುಂದೆಯೂ ಕೂಡ ಪಕ್ಷಾತೀತವಾಗಿ ಹಾಗೂ ಎಲ್ಲಾ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದರು.
ಈಗಾಗಲೇ ಬೆಂಗಳೂರು ಬಂದ್ ಯಶಸ್ವಿಯಾಗಿ ನಡೆದಿದೆ. ನಾಳೆ ಕರ್ನಾಟಕ ಬಂದ್ ಇದ್ದು ಜನತೆ ಹಾಗೂ ಸಂಘಟನೆಗಳು ಎಲ್ಲಾ ರೀತಿಯಲ್ಲೂ ಸಹಕಾರ ನೀಡಬೇಕಾಗಿದೆ. ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟದ ಕಿಚ್ಚನ್ನು ಎಲ್ಲರೂ ಮೈಗೂಡಿಸಿಕೊಂಡು ಒಗ್ಗಟ್ಟಿನ ಹೋರಾಟವನ್ನು ಮಾಡಬೇಕಿದೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಇತಿಹಾಸ ತಜ್ಞ ತಲಕಾಡು ಚಿಕ್ಕರಂಗೇಗೌಡ ,ಸಾಹಿತಿ ಎಲ್.ಎನ್. ಮುಕುಂದರಾಜ್, ಗೌಡತಿಯರ ಸೇನೆಯ ರಾಜ್ಯಾಧ್ಯಕ್ಷೆ ರೇಣುಕಾ, ರೈತ ನಾಯಕಿ ಸುನಂದಾ ಜಯರಾಮ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ರೈತ ಸಂಘದ ಕೆ. ಬೋರಯ್ಯ,ಮುದ್ಧೇಗೌಡ ಮತ್ತಿತರರಿದ್ದರು.