ನಾಗಮಂಗಲ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ, ಮತಯಾಚನೆ ಮಾಡುವ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಡ್ಡಿಪಡಿಸಿದ್ದಲ್ಲದೆ, ಅವರ ಪ್ರಚಾರ ವಾಹನದ ಮೇಲೆ ಕಲ್ಲು ತೂರಿದ ಘಟನೆ ನಡೆದಿದೆ.
ಇಂದು ಮಧ್ಯಾಹ್ನದ ವೇಳೆ ಚಲುವರಾಯಸ್ವಾಮಿ ಹಾಗೂ ಅವರ ಪತ್ನಿ ಧನಲಕ್ಷ್ಮಿ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಸಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಶಶಿಕಲಾ ನರ್ಸಿಂಗ್ ಹೋಂ ಬಳಿ ಜೆಡಿಎಸ್ ಪಕ್ಷದ ಪ್ರಚಾರದ ವಾಹನದಲ್ಲಿ ಬಂದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದವರು ಪ್ರಚಾರ ಮಾಡುತ್ತಿದ ಸ್ಥಳಕ್ಕೆ ಆಗಮಿಸಿ ಅವರ ಪಕ್ಷದ ಅಭ್ಯರ್ಥಿ ಪರ ಘೋಷಣೆ ಕೂಗಿ ಮತಯಾಚನೆಗೆ ಅಡ್ಡಿ ಪಡಿಸಿದರು.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಕೂಡ ಕಾಂಗ್ರೆಸ್ ಅಭ್ಯರ್ಥಿ ಚಲುವರಾಯಸ್ವಾಮಿ ಪರ ಘೋಷಣೆ ಕೂಗಿದರು. ಈ ವೇಳೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಕಾಂಗ್ರೆಸ್ ಪಕ್ಷದ ಪ್ರಚಾರ ವಾಹನದ ಮೇಲೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರದ ವಾಹನದ ಗಾಜು ಹೊಡೆದಿದ್ದು, ವಾಹನ ಚಾಲಕ ಗಾಯಗೊಂಡಿರುವುದು ಕಂಡುಬಂದಿದೆ.
ಈ ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇದ್ದಂತಹ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಲಾಠಿ ಪ್ರಹಾರ ಮಾಡಿ ಘಟನಾ ಸ್ಥಳದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಿದರು.
ಘಟನೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಮತಯಾಚನೆ ಅರ್ಧಕ್ಕೆ ಮೊಟಕುಗೊಳಿಸಿ ಹೊರಟು ಹೋದರು. ಜೆಡಿಎಸ್ ಕಾರ್ಯಕರ್ತರ ಈ ನಡೆ ತಾಲ್ಲೂಕಿನ ಜನರಲ್ಲಿ ಬೇಸರ ಮೂಡಿಸಿದೆ.