ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗೂ ಹೆಚ್ಚಿನ ಆದ್ಯತೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯನಗರದ ಶ್ರೀಲಕ್ಷ್ಮಿ ಜನಾರ್ಧನ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ಮಕ್ಕಳಿಗೂ ಶುಭ ಹಾರೈಸಿದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಅಡಗಿರುತ್ತದೆ. ಅವರ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಭೆ ಗುರುತಿಸಿ, ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಉತ್ತೇಜನ ನೀಡಿ, ಹೊರ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಶಾಲಾ ಮಟ್ಟದಲ್ಲಿ ಇಂತಹ ಪ್ರತಿಭೆಗಳನ್ನು ಗುರುತಿಸಿದರೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸಲು ಅವಕಾಶ ಸಿಗುತ್ತದೆ. ಇದರಿಂದ ಅವರು ಜೀವನದಲ್ಲಿ ಮತ್ತಷ್ಟು ಸಂಶೋಧನೆ-ಪ್ರಯೋಗಗಳನ್ನು ಮಾಡುತ್ತಾರೆ ಎಂದರು.
ವಿದ್ಯಾರ್ಥಿಗಳು ಶಿಕ್ಷಣದಷ್ಟೇ ಆರೋಗ್ಯದ ಬಗ್ಗೆ ಗಮನ ಕೊಟ್ಟು ಯೋಗಾಭ್ಯಾಸ ನಾನಾ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ, ಮಾನಸಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಸಕರಾದ ರವಿಕುಮಾರ್ ಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿಡಿಪಿಐ ಹೆಚ್ ಶಿವರಾಮೇಗೌಡ, ಬಿಇಒ ಮಹದೇವ, ಲಕ್ಷ್ಮಿ ಜನಾರ್ದನ ಪ್ರೌಢಶಾಲೆಯ ಅಧ್ಯಕ್ಷ ಅಂಜನಾ ಶ್ರೀಕಾಂತ್ ಸೇರಿದಂತೆ ಇನ್ನಿತರರಿದ್ದರು.