ಮಂಡ್ಯ ಜಿಲ್ಲೆಯ ಅಭಿವೃದ್ಧಿ ನಿಂತ ನೀರಾಗಿದೆ. ನಮ್ಮ ಹಿರಿಯರ ಆಡಳಿತದ ನಂತರ ಜಿಲ್ಲೆಯ ಅಭಿವೃದ್ಧಿ ಯನ್ನು ಇತರ ಜಿಲ್ಲೆಗಳಿಗೆ ಹೋಲಿಸಿ ನೋಡಿದರೆ ತಲೆ ತಗ್ಗಿಸುವಂತಾಗುತ್ತದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಮಂಡ್ಯದ ಕರ್ನಾಟಕ ಸಂಘದ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಏರ್ಪಡಿಸಿದ್ದ ”ಪ್ರಜಾಧ್ವನಿ” ಯಾತ್ರೆಯ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪಕ್ಕದ ಜಿಲ್ಲೆಗಳಾದ ಮೈಸೂರು, ಹಾಸನ, ತುಮಕೂರಿನ ಅಭಿವೃದ್ಧಿ ನೋಡಿದರೆ ಮಂಡ್ಯ ಅಭಿವೃದ್ಧಿಯಲ್ಲಿ ಸಾಕಷ್ಟು ಹಿನ್ನಡೆ ಕಂಡಿದೆ. ಏಳಕ್ಕೆ ಏಳು ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೂ ಅಭಿವೃದ್ಧಿ ಆಗದಿರುವುದು ತಲೆತಗ್ಗಿಸ ಬೇಕಾದ ವಿಚಾರ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು, ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆ ಅನಿವಾರ್ಯ, ಮಂಡ್ಯ ಜಿಲ್ಲೆಗೆ ಕಾಂಗ್ರೆಸ್ ಪಕ್ಷ ಅನಿವಾರ್ಯ ಎಂದರು.
ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ಧಿ
2013ರಲ್ಲಿ ಸಿದ್ದರಾಮಯ್ಯ ಅವರು ನೀಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ವಿಪರೀತ. ಆರ್ಥಿಕ ಭದ್ರತೆ ಇಲ್ಲ. ಆಡಳಿತದಲ್ಲಿ ಶಿಸ್ತಿಲ್ಲದಂತಾಗಿದೆ. ಬೆಲೆಯೇರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳನ್ನು ಪೂರೈಸಿದೆ. ಬಿಜೆಪಿ-ಜೆಡಿಎಸ್ ಆಡಳಿತದಲ್ಲಿ ರಾಜ್ಯ ಮತ್ತು ಜಿಲ್ಲೆ ತೀವ್ರ ಹಿನ್ನಡೆ ಹೊಂದಿದೆ ಎಂದು ಟೀಕಿಸಿದರು.
ಒಗ್ಗಟ್ಟು ಪ್ರದರ್ಶಿಸಿ
ನಮ್ಮಲ್ಲಿ ಏನೇ ಭಿನಾಭಿಪ್ರಾಯಗಳಿದ್ದರೂ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಒಂದಾಗಿ ಒಗ್ಗಟ್ಟು ಪ್ರದರ್ಶಿಸಬೇಕಿದೆ. ಜ.27 ರಂದು ಮಂಡ್ಯದಲ್ಲಿ ನಡೆಯಲಿರುವ ‘ಪ್ರಜಾಧ್ವನಿ’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲಾ ಮುಖಂಡರು ಒಂದಾಗಿ ಶ್ರಮಿಸಬೇಕಿದೆ.
ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿದೆ. ಮೇಕೆದಾಟು ಯಾತ್ರೆ ರಾಜ್ಯದ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ರಾಜ್ಯದ ಅಭಿವೃದ್ಧಿಗೂ ಕಾಂಗ್ರೆಸ್ ಅನಿವಾರ್ಯ ಎಂದರು.
ಮಾಜಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ, ಎಂ.ಎಸ್.ಆತ್ಮಾನಂದ, ಶಾಸಕ ಶಾಸಕರಾದ ಕೆ.ಬಿ.ಚಂದ್ರಶೇಖರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಬಿ.ಪ್ರಕಾಶ್, ಎಚ್.ಬಿ.ರಾಮು, ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಮುಖಂಡರಾದ ಗಣಿಗ ರವಿಕುಮಾರ್, ಸಿದ್ಧಾರೂಢ ಸತೀಶ್ ಗೌಡ, ಡಾ.ಹೆಚ್.ಕೃಷ್ಣ, ಕೀಲಾರ ರಾಧಾಕೃಷ್ಣ, ಚಿದಂಬರ್ ಮತ್ತಿತರರಿದ್ದರು.