ಭ್ರಷ್ಟಾಚಾರದ ಆರೋಪದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.
ಚಂದ್ರಬಾಬು ನಾಯ್ಡು ಅವರ ಅಧಿಕಾರಾವಧಿಯಲ್ಲಿ ನಡೆದ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ 317 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಟಿಡಿಪಿ ಆಡಳಿತದಲ್ಲಿ ಯುವಕರಿಗೆ ಕೌಶಲ್ಯ ತರಬೇತಿ ನೀಡಲು ಈ ಸಂಸ್ಥೆಯನ್ನು ಸ್ಥಾಪಿಸಲಾಗಿತ್ತು.
ಮಧ್ಯರಾತ್ರಿಯ ಬಳಿಕ ನಡೆದ ಭಾರೀ ಬೆಳವಣಿಗೆಯಲ್ಲಿ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆಯ ಅಧಿಕಾರಿಗಳು ಇಂದು ನಾಯ್ಡು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಅಧಿಕಾರಿಗಳು ವಿಜಯವಾಡಕ್ಕೆ ಕರೆತಂದಿದ್ದಾರೆ.
ನಿನ್ನೆ ತಡರಾತ್ರಿ, ಅಧಿಕಾರಿಗಳು ನಂದ್ಯಾಲ್ನಲ್ಲಿರುವ ಫಂಕ್ಷನ್ ಹಾಲ್ಗೆ ಆಗಮಿಸಿ ನಾಯ್ಡು ಅವರಿಗೆ ಬಂಧನ ವಾರಂಟ್ ನೀಡಿದ್ದರು. ಆದರೆ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರಿಂದ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಈ ವೇಳೆ ಪೊಲೀಸರು ಮತ್ತು ನಾಯ್ಡು ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿಯೂ ನಡೆದಿತ್ತು.
ವಾರೆಂಟ್ ಬಗ್ಗೆ ಪ್ರತಿಕ್ರಿಯಿಸಿದ್ದ ಚಂದ್ರ ಬಾಬು ನಾಯ್ಡು, ನನ್ನ ವಿರುದ್ಧ ಮಾಡಿದ ಆರೋಪದ ಬಗ್ಗೆ ಪೊಲೀಸರ ಬಳಿ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದ್ದರು. ಅಲ್ಲದೆ ಪ್ರಕರಣದಲ್ಲಿ ಮೂಲಭೂತ ಸಾಕ್ಷ್ಯಗಳಿಲ್ಲದೆ ಅವರು ನನ್ನನ್ನು ಹೇಗೆ ಬಂಧಿಸುತ್ತಾರೆ? ಎಂದು ಪ್ರಶ್ನಿಸಿದ್ದರು.
ಚಂದ್ರ ಬಾಬು ನಾಯ್ಡು ಅವರನ್ನು ವಶಕ್ಕೆ ಪಡೆಯುವ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಟಿಡಿಪಿಯ ಕೆಲವು ಕಾರ್ಯಕರ್ತರನ್ನು ಬಂಧಿಸಲಾಗಿದೆ.