ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟಿರುವ ಬಿಇಓ ಚಂದ್ರಪಾಟೀಲ್ ಅವರ ಸಾಧನೆ ಗಮನಾರ್ಹವಾಗಿದ್ದು, ಹೆಮ್ಮೆ ತಂದಿದೆ ಎಂದು ತಹಸೀಲ್ದಾರ್ ಲೋಕೇಶ್ ಹೇಳಿದರು.
ಮಳವಳ್ಳಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಮಾನವ ಸಂಪನ್ಮೂಲ ಇಲಾಖೆ ನವದೆಹಲಿ ವತಿಯಿಂದ ಉತ್ತಮ ಆಡಳಿತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಚಟುವಟಿಕೆ ಅಳವಡಿಕೆಗಾಗಿ ಕೇಂದ್ರ ಶಿಕ್ಷಣ ಸಚಿವರಿಂದ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಮಳವಳ್ಳಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರ ಪಾಟೀಲ್ ಅವರಿಗೆ ಅಭಿನಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರಾಂತಿಕಾರಿ ಬದಲಾವಣೆ ತರುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಟ ಸಾಧನೆಗಾಗಿ ರಾಷ್ಟ್ರಮಟ್ಟದ ಪುರಸ್ಕಾರ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್ ಅವರು ಮಂಡ್ಯ ಜಿಲ್ಲೆಗೆ ಮತ್ತು ತಾಲೂಕಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ತಂದಿರುವುದು ಸಂತಸದ ವಿಷಯವಾಗಿದೆ ಎಂದರು
ಸನ್ಮಾನ ಸ್ವೀಕರಿಸಿ ಮಾತನಾಡಿದ ಚಂದ್ರಪಾಟೀಲ್, ಅಸೂಯೆ, ಸ್ವಾರ್ಥ ಇಲ್ಲದೆ ಮತ್ತು ಶಾಂತಿ ಸಹಬಾಳ್ವೆ ಜೀವನದಿಂದ ಸಾರ್ಥಕತೆಯನ್ನು ಮೆರೆಯಬಹುದು. ನಮ್ಮ ಶಿಕ್ಷಕರು ಹಾಗೂ ತಾಲೂಕಿನ ಎಲ್ಲರ ಸಂಘಟಿತ ಪ್ರಯತ್ನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದರು.
ಕಾರ್ಯಕ್ರಮ ದಲ್ಲಿ ಸಮನ್ವಯಾಧಿಕಾರಿ ಶ್ರೀನಿವಾಸ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಶಿಕ್ಷಕರಾದ ಪುಟ್ಟಸ್ವಾಮಿ, ನಾಗೇಶ್, ಸಿದ್ದೇಗೌಡ, ಶಿವಲಿಂಗಯ್ಯ, ಚಂದ್ರು, ನಾಗೇಶ್, ನಾಗೇಂದ್ರ ಮೂರ್ತಿ ಹಾಗೂ ಮಲ್ಲೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.