ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಪೋಷಕರಲ್ಲಿ ಮನವೊಲಿಕೆ ಜೊತೆಗೆ ಜಾಗೃತಿ ಕಾರ್ಯಕ್ರಮಗಳು ಅತ್ಯಾವಶ್ಯಕ ಎಂದು ಜಿಲ್ಲಾ ಗಾಯಕರ ಟ್ರಸ್ಟ್ ಅಧ್ಯಕ್ಷ ಡಾ.ಮಾದೇಶ್ ಹೇಳಿದರು.
ಮಂಡ್ಯ ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಜಾನಪದ ಮತ್ತು ಬೀದಿನಾಟಕ ಕಲಾತಂಡಗಳ ಒಕ್ಕೂಟ ಜಿಲ್ಲಾ ಶಾಖೆ ಪರಿಶಿಷ್ಠಜಾತಿ ಉಪಯೋಜನೆಯಡಿ ಆಯೋಜಿಸಿದ್ದ ಬಾಲ್ಯ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ದತಿ ವಿರುದ್ಧ ಜನಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ದತಿಯನ್ನು ನಿಯಂತ್ರಣ, ನಿಷೇಧ ಮಾಡುವುದಲ್ಲ, ಸಂಪೂರ್ಣವಾಗಿ ನಿರ್ಮೂಲನೆಗೊಳಿಸಬೇಕು. ಅದಕ್ಕೆ ನಾವೆಲ್ಲರೂ ಪಣ ತೊಡಬೇಕು. ಮಕ್ಕಳ ರಕ್ಷಣೆ ಜೊತೆಗೆ ಪ್ರತಿಯೊಬ್ಬರಿಗೆ ಶಿಕ್ಷಣ ನೀಡಿದಾಗ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದರು.
ಸಂವಿಧಾನದಲ್ಲಿ ಮಕ್ಕಳ ರಕ್ಷಣೆ ಮತ್ತು ಬೆಳೆವಣಿಗೆಗೆ ಸಾಕಷ್ಟು ಹಕ್ಕುಗಳು, ಸೌಲಭ್ಯಗಳು ದಾಖಲಾಗಿವೆ, ಸಮರ್ಪಕವಾಗಿ ಜಾರಿಗೊಂಡರೆ ಇಂತಹ ಅನಿಷ್ಠ ಪದ್ದತಿಗಳು ದೂರವಾಗುತ್ತವೆ, ಜನರಲ್ಲಿ ಕಾನೂನು ಅರಿವು ಮೂಡಿಸುವುದು ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಜಾನಪದ ಮತ್ತು ಬೀದಿನಾಟಕ ಕಲಾತಂಡಗಳ ಒಕ್ಕೂಟ ಜಿಲ್ಲಾ ಶಾಖೆ ಪದಾಧಿಕಾರಿಗಳಾದ ಸಂತೆಕಸಲಗೆರೆ ಬಸವರಾಜು, ಹನಿಯಂಬಾಡಿ ಶೇಖರ್, ವೈರಮುಡಿ, ಕಾರ್ಮಿಕ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.