ಕಾಂಗ್ರೆಸ್ ಪಕ್ಷದ ಪ್ರಮುಖ “5 ಗ್ಯಾರಂಟಿ” ಯೋಜನೆಗಳ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.
ಗ್ಯಾರಂಟಿ ಯೋಜನೆಗಳ ಜಾರಿಗೆ ರಾಜ್ಯದಾದ್ಯಂತ ಒತ್ತಡ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಇಂದಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಕಾಂಗ್ರೆಸ್ ಪಕ್ಷದ ಪ್ರಮುಖ “5 ಗ್ಯಾರಂಟಿ” ಯೋಜನೆಗಳ ಅನುಷ್ಠಾನದ ಕುರಿತು ಮುಖ್ಯಮಂತ್ರಿ @siddaramaiah ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. pic.twitter.com/GPax5lsx47
— CM of Karnataka (@CMofKarnataka) May 29, 2023
“>
ಕೊಟ್ಟ ಮಾತು ಈಡೇರಿಸುತ್ತೇವೆ
ನಮ್ಮ ಸರ್ಕಾರ ಘೋಷಿತ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಿದೆ. ನಾವು ಕೊಟ್ಟ ಮಾತು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಕ್ರಮವಾಗಿ ಲೋಪವಿಲ್ಲದೆ ಜಾರಿ ಮಾಡಬೇಕಾಗಿದೆ. ಹೀಗಾಗಿ ಯೋಜನೆ ಜಾರಿಗೆ ಸಮಯ ಬೇಕು. ಯೋಜನೆ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಯೋಜನೆಗಳ ಬ್ಲೂಪ್ರಿಂಟ್ ಸಿದ್ಧತೆ ಬಗ್ಗೆ ಚರ್ಚೆಯಾಗಿದೆ ಎಂದರು.
ಸಂಪುಟ ಸಭೆಯಲ್ಲಿ ಯೋಜನೆ ಜಾರಿ ಬಗ್ಗೆ ನಿರ್ಧಾರವಾಗಲಿದೆ. ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಅಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಅದಕ್ಕೂ ಮೊದಲು ಸಭೆಗೆ ಅಗತ್ಯವಾದ ಮಾಹಿತಿಗಳನ್ನ ಒಗ್ಗೂಡಿಸಿಕೊಳ್ಳಲು ಈ ಸಭೆ ನಡೆಸಲಾಯಿತು ಎಂದರು.
ಯೋಜನೆಗಳ ಜಾರಿ ವಿಚಾರದಲ್ಲಿ ಯಾರೂ ಅನುಮಾನ ಪಡುವ ಅವಶ್ಯಕತೆ ಇಲ್ಲ, ಕೊಟ್ಟ ಮಾತಿನಂತೆಯೇ ನಾವು ನಡೆದುಕೊಳ್ಳುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.