ಕೇಂದ್ರ ಸರ್ಕಾರದ ತೆರಿಗೆ ಪಾಲು ಹಂಚಿಕೆ ಹಾಗೂ ಬರ ಪರಿಹಾರ ನೀಡದಿರುವ ಕ್ರಮ ಖಂಡಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯ ಸರ್ಕಾರವು ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯ ಆಗಿರುವ ಅನ್ಯಾಯ ಖಂಡಿಸಿ ನಡೆಸಯುತ್ತಿರುವ ಪ್ರತಿಭಟನೆಯಲ್ಲಿ ತಾವು ಪಾಲ್ಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಪತ್ರ ಬರೆದಿದ್ದಾರೆ.
ಸಿಎಂ ಬರೆದ ಪತ್ರದಲ್ಲೇನಿದೆ
ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ದೆಹಲಿಯ ಜಂತರ್ ಮಂತರ್ನಲ್ಲಿ ಫೆಬ್ರವರಿ, 07 ರಂದು ಒಂದು ದಿನದ ಧರಣಿ ಸತ್ಯಾಗ್ರಹವನ್ನು ನಡೆಸಲು ತೀರ್ಮಾನಿಸಿದ್ದೇವೆ.
ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಬಾಧಿಸುತ್ತಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿಂದ, ಈ ಧರಣಿ ಸತ್ಯಾಗ್ರಹದಲ್ಲಿ ತಾವು ಕೂಡಾ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮ್ಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ಧಾರೆ.
ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ದ ಈಗಾಗಲೇ ಸಂಸದ ಡಿ.ಕೆ.ಸುರೇಶ್ ಧ್ವನಿಯತ್ತಿದ್ದು, ದೇಶದಾದ್ಯಂತ ಸದ್ದು ಮಾಡುತ್ತಿದೆ, ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವು ದೆಹಲಿಯಲ್ಲಿ ಕೇಂದ್ರದ ವಿರುದ್ದ ಹೋರಾಟಕ್ಕೆ ಸಜ್ಜಾಗಿದೆ. ಇದಲ್ಲದೇ ಕನ್ನಡಿಗರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಅಭಿಯಾನ ನಡೆಸಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳ ಸಂಸದರಿಗೂ ಪತ್ರ ಬರೆದು ಕರ್ನಾಟಕದ ಪರ ಹೋರಾಟದಲ್ಲಿ ಕೈಜೋಡಿಸುವಂತೆ ಮನವಿ ಮಾಡಿದ್ಧಾರೆ.