ಕಬ್ಬಿನ ಹಾಗೂ ಹಾಲಿನ ದರ ಏರಿಕೆ ಮಾಡುವ ಸಂಬಂಧ ಬಿಜೆಪಿ ಸರಕಾರದ ಸಿಎಂ ನೀಡಿದ ಭರವಸೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ರೈತಸಂಘದ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದರು.
ಪಾಂಡವಪುರ ಪಟ್ಟಣದ ಮಂಡ್ಯ ಸರ್ಕಲ್ನಲ್ಲಿ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡರ ನೇತೃತ್ವದಲ್ಲಿ ಜಮಾಯಿ ಸಿದ ರೈತ ಸಂಘದ ಕಾರ್ಯಕರ್ತರು ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಲು ಮುಂದಾದರು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಬ್ಯಾರಿಗೇಟ್ ಹಾಕಿ ರಸ್ತೆ ಪಕ್ಕದ ಪ್ರತಿಭಟನೆ ನಡೆಸಲು ಅವಕಾಶ ಮಾಡಿಕೊಟ್ಟು ಸುತ್ತಲು ಪೊಲೀಸ್ ಸರ್ಪಗಾವಲು ಹಾಕಿದರು. ಏಲಿಪ್ಯಾಡ್ ನಿಂದ ನೇರವಾಗಿ ಕಾರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪನವರು ಆಗಮಿಸುತ್ತಿದ್ದಂತೆಯೇ ರೈತಸಂಘದ ಕಾರ್ಯಕರ್ತರು ಸಿಎಂಗೆ ಧಿಕ್ಕಾರ ಕೂಗಿ ಕಪ್ಪು ಬಾವುಟ ಪ್ರದರ್ಶಿಸಿದರು.
ಸಿಎಂ ಭರವಸೆ ನೀಡಿ ರೈತರ ಸಮಸ್ಯೆ ಬಗೆಹರಿಸಿಲ್ಲ, ಯಾವಾಗ ಕೇಳಿದರು ಸಿಹಿಸುದ್ದಿ ಕೊಡುತ್ತೇವೆ ಎಂದು ಭರವಸೆ ನೀಡುವ ಸಿಎಂ ಬರೀ ಆಶ್ವಾಸನೆ ನೀಡುತ್ತಿದ್ದಾರೆ. ಕಬ್ಬಿನ ಬೆಲೆ ಸೇರಿದಂತೆ ರೈತರ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಕೆಂಪೂಗೌಡ ಎಚ್ಚರಿಕೆ ನೀಡಿದರು.