ಮದ್ದೂರು ಪಟ್ಟಣದ ತಮಿಳು ಕಾಲೋನಿಯ ಶ್ರಮಿಕ ನಿವಾಸಿಗಳಿಗೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಮಿಳು ಕಾಲೋನಿಯ ಶ್ರಮಿಕ ನಿವಾಸಿಗಳು ಇತ್ತಿಚೇಗೆ ಪತ್ರಿಭಟನೆ ನಡೆಸಿ ‘ನಮಗೆ ಮೂಲಸೌಲಭ್ಯ ಒದಗಿಸದ್ದಿದ್ದರೆ ಮತದಾನ ಬಹಿಷ್ಕಾರ’ ಮಾಡುವುದಾಗಿ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬುಧವಾರ ಕಾಲೋನಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿವಾಸಿಗಳ ಅಹವಾಲು ಆಲಿಸಿದರು.
ಈ ಸಂದರ್ಭದಲ್ಲಿ ನಿವಾಸಿಗಳು, ಕೂಡಲೇ ಕಾಲೋನಿಯ ಅಳತೆ ಮಾಡಿಸಿ, ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರಿಸಬೇಕೆಂದು ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ನಾಳೆಯೇ ಅಳತೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ವಿದ್ಯಾರ್ಥಿಗಳಿಗಳಿಗೆ ವಿದ್ಯಾರ್ಥಿ ವೇತನ ದೊರೆತಿಲ್ಲ ಎಂದು ದೂರು ಸಲ್ಲಿಸಿದಾಗ, ಅಗತ್ಯ ದಾಖಲಾತಿಗಳನ್ನು ಒದಗಿಸಿದರೆ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಅಲ್ಲದೇ ಕುಡಿಯುವ ನೀರಿನ ಸೌಲಭ್ಯವಿಲ್ಲ ಎಂದು ಗಮನ ಸೆಳೆದಾಗ, ಕೂಡಲೇ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಲಭ್ಯ ಒದಗಿಸಿ, ಚುನಾವಣೆಗೂ ಕುಡಿಯುವ ನೀರು ಒದಗಿಸುವುದಕ್ಕೂ ಯಾವುದೇ ಸಂಬಂಧವಿಲ್ಲ, ಕೂಡಲೇ ನೀರು ಒದಗಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.