ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ಅಭಿಯಾನದಡಿ ಮನೆ ಬಾಗಿಲಿಗೆ ಬಂದಿದ್ದಾರೆ. ಸಾರ್ವಜನಿಕರು ಕುಂದುಕೊರತೆ ಇದ್ದರೆ ಬಂದುಪರಿಹರಿಸಿ ಕೊಳ್ಳಬೇಕೆಂದು ಶಾಸಕ ಸುರೇಶ್ ಗೌಡ ತಿಳಿಸಿದರು.
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಗೊಂಡೇನಹಳ್ಳಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನ ಸಾಮಾನ್ಯರು ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲಾತಿಗಳಲ್ಲಿನ ಸಣ್ಣಸಣ್ಣ ತಿದ್ದುಪಡಿಗಾಗಿ ಜಿಲ್ಲಾ ಮತ್ತು ತಾಲ್ಲೂಕು ಕಚೇರಿಗೆ ಹಲವು ಬಾರಿ ಭೇಟಿ ನೀಡುತ್ತಾರೆ. ಅವರಿಗೆ ಸರಿಯದ ಮಾರ್ಗದರ್ಶನ ನೀಡಿ ಸರಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರ ಕುಂದು ಕೊರತೆಗಳನ್ನು ಸರ್ಕಾರಿ ಕಚೇರಿಯಲ್ಲಿ ಯಾವುದೇ ವಿಳಂಬ ಮಾಡದೆ ಸಮಯಕ್ಕೆ ಸರಿಯಾಗಿ ವಿಲೇವಾರಿಮಾಡಿ. ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲು ಕ್ರಮವಹಿಸಿ ಎಂದು ಹೇಳಿದರು.
ಇದೆ ವೇಳೆ ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಮಾತನಾಡಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಗೊಂಡೆನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡು ಗ್ರಾಮದ ಜನರೊಂದಿಗೆ ಅರಳಿಕಟ್ಟೆ ಸಂವಾದ ಮಾಡಿ ಕುಂದು ಕೊರತೆ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.
ಕಂದಾಯ ಇಲಾಖೆ ಹಾಗೂ ಇನ್ನಿತರ ಇಲಾಖೆಯ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಸರ್ವೇ ಮಾಡಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಿ ಹಾಗೂ ವಿವಿಧ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ನಿಗಧಿತ ಕೌಂಟರ್ ಗಳಿಗೆ ನೀಡಿ ಅರ್ಜಿಗಳನ್ನು ಪರಿಶೀಲಿಸಿ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಜೊತೆಗೆ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶದಲ್ಲಿ ಮಾಡಬೇಕು. ಈ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ, ಗರ್ಭಿಣಿ ಮಹಿಳೆಯರಿಗೆ ಸೀಮಂತ, ನರೇಗಾ ಯೋಜನೆಯ ಕುರಿತು ಕೈಪಿಡಿ ಮತ್ತು ಕರಪತ್ರ ಲೋಕಾರ್ಪಣೆ, ವಿಕಲಚೇತನರಿಗೆ ಯು.ಡಿ.ಐ.ಡಿ ಕಾರ್ಡ್,ಎಸ್.ಎಸ್. ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕೃತ, ಆಶಾಕಾರ್ಯಕರ್ತೆಯರಿಗೆ ಸಮವಸ್ತ್ರ,ವಿಕಲಚೇತನ ಫಲಾನುಭವಿಗಳಿಗೆ ಸೋಲಾರ್, ಬಿತ್ತನೆ ಬೀಜ, ಹಾಗೂ ಕಂದಾಯಇಲಾಖೆ ಯಿಂದ 100, ಪಂಚಾಯತ್ ರಾಜ್ ಇಲಾಖೆಯಿಂದ 120 ಸೇರಿದಂತೆ 400ರಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಇಲಾಖೆಗೆ ಸಂಬಂಧಿಸಿದ ಸರ್ಕಾರ ಯೋಜನೆಗಳಿಂದ ಸೌಲಭ್ಯಗಳನ್ನು ವಿತರಿಸಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಎ.ಋತ್ರೇನ್, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವನಂದಮೂರ್ತಿ,ತಹಶೀಲ್ದಾರ್ ನಂದೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂಜಮ್ಮಣಿ, ಉಪಾಧ್ಯಕ್ಷೆ ಪಾರ್ವತಮ್ಮ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.