ದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ ತಮಿಳುನಾಡಿಗೆ 18 ದಿನಗಳ ಬದಲು, 15 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಲಾಗಿದೆ, ಇದರಿಂದ ಕೆರಳಿ ಕೆಂಡವಾಗಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು, ಸರ್ಕಾರ ನೀರು ಬಿಡುವ ನಿರ್ಧಾರ ಕೈಗೊಂಡರೇ ನಮ್ಮ ಹೋರಾಟ ಉಗ್ರ ಸ್ವರೂಪ ತಾಳಲಿದೆ ಎಂದು ಎಚ್ಚರಿಕೆ ನೀಡಿದೆ.
ಪ್ರಾಧಿಕಾರದ ಆದೇಶ ಖಂಡಿಸಿ ಶುಕ್ರವಾರ ಸಂಜೆ ಮಂಡ್ಯನಗರದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ ಸಮಿತಿ ಸದಸ್ಯರು, ನಮಗೆ ಎಂದಿಗೂ ಪ್ರಾಧಿಕಾರದಿಂದ ನ್ಯಾಯ ಸಿಕ್ಕಿಲ್ಲ, ಇಂತಹ ಆದೇಶವನ್ನು ನಾವು ಎಂದಿಗೂ ಒಪ್ಪುವುದಿಲ್ಲ, ಮೊದಲು ರಾಜ್ಯ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು, ಒಂದು ವೇಳೆ ರಾಜ್ಯದ ಜನರ ಹಿತವನ್ನು ಬಲಿಕೊಡುವ ನಿರ್ಧಾರ ಕೈಗೊಂಡರೇ, ಈ ಹೋರಾಟ ಉಗ್ರ ಸ್ವರೂಪಕ್ಕೆ ತಿರುಗಲಿದೆ ಎಂದು ಸಮಿತಿಯ ಪರವಾಗಿ ಹೋರಾಟಗಾರ್ತಿ ಸುನಂದಾ ಜಯರಾಂ ಎಚ್ಚರಿಕೆ ನೀಡಿದರು.
ಈ ಸರ್ಕಾರಕ್ಕೆ ಪಂಚೇಂದ್ರಿಯಗಳೇ ಇಲ್ಲ, ರೈತರ ಕಷ್ಟಗಳು ಅರ್ಥವಾಗುತ್ತಿಲ್ಲ, ರಾಜ್ಯ ಸರ್ಕಾರ ಪ್ರಾಧಿಕಾರದ ಮುಂದೆ ಸಮರ್ಥವಾದ ವಾದ ಮಂಡಿಸುವಲ್ಲಿ ವಿಫಲವಾಗಿದೆ, ಕೂಡಲೇ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.