ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ಧ್ವಜ ವಿವಾದದ ಸಂಬಂಧಿಸಿದಂತೆ ಮಾತನಾಡುವಾಗ ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಕೆ ಮಾಡಿ, ಅವಮಾನ ಮಾಡಿರುವ ಬಿಜೆಪಿ ಮುಖಂಡ ಸಿ.ಟಿ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಳವಳ್ಳಿ ಶಾಸಕ ಪಿ.ಎಂ ನರೇಂದ್ರಸ್ವಾಮಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಮಂಡ್ಯ ತಾಲೂಕು ಕೆರಗೋಡು ಗ್ರಾಮದಲ್ಲಿ ಜಿಲ್ಲಾಡಳಿತ ಹಾರಿಸಿರುವ ರಾಷ್ಟ್ರಧ್ವಜವನ್ನು ಬಿಜೆಪಿ ನಾಯಕ ಸಿ.ಟಿ ರವಿ ತಾಲಿಬಾನ್ ಧ್ವಜ ಎಂದು ನಿಂದನೆ ಮಾಡಿ ರಾಷ್ಟ್ರ ಮತ್ತು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ, ಇವರ ವಿರುದ್ಧ ಸೆಕ್ಷನ್ 51A (a) ಅನ್ವಯ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಸಿ.ಟಿ ರವಿಗೆ ಬುದ್ಧಿ ಭ್ರಮಣೆ
ರಾಷ್ಟ್ರ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವುದರಿಂದ ಭಾರತದ ಪ್ರಜೆಯಾಗಿ ದೂರು ಸಲ್ಲಿಸಿದ್ದೇನೆ, ಪೊಲೀಸರ ಸೂಕ್ತ ಕ್ರಮ ವಹಿಸಲು ಮುಂದಾಗಬೇಕು. ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದಿರುವ ಬಿಜೆಪಿ ಪಕ್ಷದ ಸಿ.ಟಿ ರವಿಗೆ ಬುದ್ಧಿಭ್ರಮಣೆಯಾಗಿದೆ, ಸಂವಿಧಾನಬದ್ಧವಾಗಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆಂದು ಪ್ರಮಾಣವಚನ ಸ್ವೀಕರಿಸಿ ಸಚಿವರಾಗಿದ್ದ ಇವರು ಮಾನಸಿಕವಾಗಿ ವಿಚಲಿತರಾಗಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದೆ, ಗುಂಡಿಗೆ ಎದೆಯೊಡ್ಡಿ ಪ್ರಾಣತ್ಯಾಗ ಮಾಡಿದ್ದಾರೆ, ಬಿಜೆಪಿಯವರು ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ, ಹೋರಾಟದಲ್ಲಿ ಎಂದಿಗೂ ಭಾಗಿಯಾಗದ ಇವರು ಬ್ರಿಟಿಷರಿಂದ ಗೌರವ ಧನ ಪಡೆದಿದ್ದಾರೆ, ತೋರಿಕೆಗಾರಿ ದೇಶ ಭಕ್ತರು ಎಂದು ಬೊಬ್ಬೆ ಹೊಡೆಯುತ್ತಿದ್ದಾರೆಂದು ಕಿಡಿಕಾರಿದರು.
ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಮೊದಲು ಬೀಜ ಬಿತ್ತಿದ್ದೆ ನರೇಂದ್ರಸ್ವಾಮಿ ಎಂಬುದನ್ನು ಮನವರಿಕೆ ಮಾಡಿಕೊಳ್ಳಲಿ, ಆ ದಿನದಲ್ಲಿ ನನಗೆ ಸಿ.ಟಿ ರವಿ ಯಾವ ರೀತಿ ಗೋಗೆರೆದಿದ್ದರೂ ತಿಳಿಯಲಿ ರಾಜ್ಯದಲ್ಲಿ ಎಂದಿಗೂ ಬಹುಮತದಿಂದ ಬಿಜೆಪಿ ಸರ್ಕಾರ ರಚಿಸಿಲ್ಲ, ಬದಲಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂಬುದನ್ನು ಅರಿಯಬೇಕು ಎಂದು ತಿರುಗೇಟು ನೀಡಿದರು.