ಮೇಲಾಧಿಕಾರಿಯ ಕಿರುಕುಳದಿಂದ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂಪ್ಯೂಟರ್ ಆಪರೇಟರ್ ಎಚ್.ಎಸ್ ಪರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ, ತಪಿತಸ್ಥ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ಕಂದಾಯ ಇಲಾಖೆ ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಗಳ ಸಂಘದ ನೇತೃತ್ವದಲ್ಲಿ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕಂಪ್ಯೂಟರ್ ಆಪರೇಟರ್ ಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮನವಿ ಪತ್ರ ರವಾನಿಸಿದರು.
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಹೋಬಳಿಯ ನಾಡ ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ ಎಚ್.ಎಸ್ ಅವರಿಗೆ ಮೇಲಾಧಿಕಾರಿ ನೀಡಿದ ಕೆಲಸದ ಒತ್ತಡ ಹಾಗೂ ಅವಮಾನದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದಾರೆ. ಕಂಪ್ಯೂಟರ್ ಆಪರೇಟರ್ ಕೆಲಸವನ್ನು ಕಳೆದ 12 ವರ್ಷದಿಂದ ಮಾಡುತ್ತಿದ್ದು ಕಂದಾಯ ಇಲಾಖೆಯ ನಾಡ ಕಛೇರಿ ಅನುಭವಿ ನೌಕರರಾಗಿದ್ದರು, ನಾಡಕಛೇರಿಯ ಉಪ ತಹಶೀಲ್ದಾರ್ ಶಿವಕುಮಾರ್ ನೀಡಿದ ಕಿರುಕುಳ ಹಾಗೂ ವೈಯಕ್ತಿಕ ದ್ವೇಷದಿಂದ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಪ್ರಕರಣ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಮೃತರ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಂಪ್ಯೂಟರ್ ಆಪರೇಟರ್ ಗಳ ಸಂಘದ ಎ.ಎಸ್ ಕೀರ್ತಿ ಪ್ರಸಾದ್, ಎಂ. ಹರೀಶ್, ಮಹೇಶ್, ಗಿರೀಶ್ ಕುಮಾರ್, ಪಂಕಜ,ಕೆ.ಆಶಾ ರಾಣಿ, ರಮಾಮಣಿ, ಚಾಂದಿನಿ, ವಿದ್ಯಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.