ಲೋಕಸಭಾ ಸದಸ್ಯರು, ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರ ಅಗಲಿಕೆ ತೀವ್ರ ಆಘಾತ ಉಂಟುಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಎನ್.ಚಲುವರಾಯಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಸರಳತೆ ಸಜ್ಜನಿಕೆಯ ಪ್ರಾಮಾಣಿಕ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಶ್ರೀ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ನನಗೆ ನೋವುಂಟು ಮಾಡಿದೆ. ತಮ್ಮ ಜೀವಿತಾವಧಿಯಲ್ಲಿ 14 ಚುನಾವಣೆಗಳನ್ನು ಎದುರಿಸಿದ್ದ ಅವರ ರಾಜಕೀಯ ಜೀವನ ಮಾದರಿಯ ಹಾದಿ. ಆರು ಅವಧಿಗೆ ಸಂಸದರಾಗಿ, ಎರಡು ಅವಧಿಗೆ ಶಾಸಕರಾಗಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಪ್ರಸಾದ್ ಅವರು; 27 ವರ್ಷಗಳ ಸುದೀರ್ಘ ಸಂಸತ್ ಸದಸ್ಯರಾಗಿ 7 ಪ್ರಧಾನಿಗಳನ್ನು ಕಂಡಿದ್ದರು. ಅವರು ಅಪರೂಪದಲ್ಲಿ ಅಪರೂಪದ ಜನನಾಯಕರಾಗಿದ್ದರು.ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಚಲುವರಾಯಸ್ವಾಮಿ ಸಂತಾಪ
ನಮ್ಮೆಲ್ಲರ ಹಿರಿಯರು, ಮಾರ್ಗದರ್ಶಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅತ್ಯಂತ ಅಪರೂಪದ ರಾಜಕಾರಣಿ.
ದಲಿತರು, ಶೋಷಿತರ ಪರ ಗಟ್ಟಿ ಧ್ವನಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ತಮ್ಮ ಅರ್ಧ ಶತಮಾನದ ಸುಧೀರ್ಘ ರಾಜಕೀಯ ಜೀವನದಲ್ಲಿ ಅನೇಕ ಸಾಧನೆ ಮಾಡಿ ಮಾದರಿಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ. ಅವರ ನಿಧನದಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ ,ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಿಲಿ ಎಂದು ಪ್ರಾರ್ಥಿಸೋಣ ಎಂದು ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.