ಹಿಂದುಳಿದ ವರ್ಗದ ಸಮಾಜಗಳು ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನ ಬದಿಗೊತ್ತಿ ರಾಷ್ಟ್ರದ ಹಿತ ಹಾಗೂ ಸಮಾಜದ ಒಳಿತಿಗೋಸ್ಕರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮನವಿ ಮಾಡಿದರು.
ಮಂಡ್ಯನಗರದ ಜ್ಯೋತಿ ಇಂಟರ್ ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಗಂಗಾಮತಸ್ಥ ಸಮಾಜದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅನಿವಾರ್ಯ ಎಂಬುದನ್ನು ತಮ್ಮ ತಮ್ಮ ಗ್ರಾಮಗಳಲ್ಲಿ ಮನವರಿಕೆ ಮಾಡಿಕೊಡಿ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಸರ್ವ ಸಮಾಜವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಪಕ್ಷವಾಗಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಸಮಾಜವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಕಳೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಾಂಪ್ರದಾಯಿಕ ಎದುರಾಳಿ ಜೆಡಿಎಸ್ ಪಕ್ಷ ಯಾವ ತೀರ್ಮಾನ ತೆಗೆದುಕೊಂಡಿತ್ತು ಇವತ್ತು ಅಧಿಕಾರಕ್ಕೋಸ್ಕರ,ರಾಜಕೀಯ ಅಸ್ತಿತ್ವಕ್ಕಾಗಿ ತತ್ವ ಸಿದ್ಧಾಂತವನ್ನು ಗಾಳಿಗೆ ತೂರಿ ರಾಜಕೀಯ ಅಧಿಕಾರಕ್ಕೋಸ್ಕರ ಕೋಮುವಾದಿ ಪಕ್ಷ ಬಿಜೆಪಿ ಜೊತೆ ಜೆಡಿಎಸ್ ಪಕ್ಷದವರು ಮೈತ್ರಿಯಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗಂಗಾ ಮತಸ್ಥ ಸಮಾಜದ ಮುಖಂಡರಾದ ಬಿ.ಲಿಂಗಯ್ಯ, ಪ್ರಕಾಶ್,ನಾಗರಾಜು, ಜಿಲ್ಲಾ ಹಿಂದುಳಿದ ಕಾಂಗ್ರೆಸ್ ಅಧ್ಯಕ್ಷ ಸಾತನೂರು ಕೃಷ್ಣ,ರಾಮಕೃಷ್ಣ, ಸಂದೇಶ, ವೀಣಾ,ಶಿವಲಿಂಗಯ್ಯ ಗುರುರಾಜ್,ಇತರರು ಹಾಜರಿದ್ದರು