ವರದಿ : ಪ್ರಭು ವಿ.ಎಸ್
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಎಸ್. ಗುರುಚರಣ್ ಸ್ಪರ್ಧೆ ಮಾಡುವುದು ನಿಶ್ಚಿತವಾಗಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ನಾಗೇಗೌಡ ಸ್ಪಷ್ಟಪಡಿಸಿದರು.
ಮದ್ದೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮದ್ದೂರು ಕ್ಷೇತ್ರಕ್ಕೆ ಎಸ್.ಗುರುಚರಣ್ ಅವರೇ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈಗಾಗಲೇ ಹಲವಾರು ಬಾರಿ ತಿಳಿದಿದ್ದಾರೆ.
ಹೀಗಿರುವಾಗ ಸಮಾಜ ಸೇವಕ ಕದಲೂರು ಉದಯ್ ಹಾಗೂ ಬೆಂಬಲಿಗರು ಕಾಂಗ್ರೆಸ್ ನಿಂದ ಚುನಾವಣೆಗೆ ಟಿಕೆಟ್ ತರುವುದಾಗಿ ಹೇಳುವ ಮೂಲಕ ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದು, ಇದಕ್ಕೆ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಕ್ಷೇತ್ರದ ಮತದಾರರು ಕಿವಿಗೊಡಬಾರದೆಂದು ಮನವಿ ಮಾಡಿದರು.
ಎಸ್. ಗುರುಚರಣ್ ರವರು ಕಳೆದ 20 ವರ್ಷಗಳಿಂದ ತಾಲೂಕಿನಲ್ಲಿ ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಕ್ಷೇತ್ರದ ಮತದಾರರು ಹೆಚ್ಚಿನ ಮತ ನೀಡಿ ಗೆಲ್ಲಿಸುವುದು ನಿಶ್ಚಿತವಾಗಿದೆ. ಇವರ ಚುನಾವಣಾ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ಕೂಡ ಪ್ರಚಾರಕ್ಕೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ಮೋಹನ್ ಕುಮಾರ್, ರಾಘವ, ಪಿ. ಸಂದರ್ಶ, ಆಶಾಗೋಪಿ, ಪ್ರಿಯಾಂಕ ಅಪ್ಪುಗೌಡ, ಜಯರಾಮು, ಅಮರ್ ಬಾಬು, ಲಿಂಗೇಗೌಡ, ಮುನಾವರ್ ಪಾಷ, ಅರುಣ್ ಕುಮಾರ್, ಪ್ರಶಾಂತ್, ಅಜ್ಜಹಳ್ಳಿ ರಾಮಕೃಷ್ಣ, ಸಿದ್ದರಾಮಣ್ಣ, ಶಂಕರಲಿಂಗೇಗೌಡ, ಸುರೇಶ್ ಕಂಠಿ, ಗೌತಮಿ ಲೋಕೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.