ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಮಂಗಲ ಲಂಕೇಶ್ ನೇತೃತ್ವದಲ್ಲಿ ನೆಲದನಿ ಬಳಗವು ಸಾಂಸ್ಕೃತಿಕ, ರಂಗಭೂಮಿ, ಶೈಕ್ಷಣಿಕ, ಆರೋಗ್ಯ ಹಾಗೂ ಪರಿಸರ ಕ್ಷೇತ್ರಗಳಲ್ಲಿ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದು, ಇದರ ಸೇವೆ ಮುಂದುವರಿಯಲಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಆಶಿಸಿದರು.
ಮಂಡ್ಯನಗರ ವಿವೇಕಾನಂದ ರಂಗಮಂದಿರದಲ್ಲಿ ನೆಲದನಿ ಬಳಗ ಆಯೋಜಿಸಿದ್ದ ‘ತಿಂಡಿಗೆ ಬಂದ ತುಂಡೇರಾಯ’ ನಾಟಕ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೆಲದನಿ ಬಳಗವು ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ವಿಶೇಷವಾದ ನಾಟಕಗಳನ್ನು ಪ್ರದರ್ಶನ ಮಾಡುತ್ತಾ ಬಂದಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ನೆಲದನಿ ಬಳಗವು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುವಂತೆ ಬೆಳೆಯಲಿ, ಸಮಾಜಕ್ಕೆ ಹಲವು ಕೊಡುಗೆಗಳನ್ನು ನೀಡುವಂತಾಗಲಿ ಎಂದರು.
ಕೊಬ್ಬರಿ- ಬೆಲ್ಲ ತಿನ್ನುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಜಾವಾಣಿಯ ಮಂಡ್ಯ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿ ಪ್ರಸ್ತುತ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಎಸ್.ಯೋಗೇಶ್ ಅವರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಅಲಯನ್ಸ್ ಸಂಸ್ಥೆ ಅಧ್ಯಕ್ಷ ಕೆ ಟಿ ಹನುಮಂತು, ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ಅಧ್ಯಕ್ಷ ತಗ್ಗಳ್ಳಿ ವೆಂಕಟೇಶ್, ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಮುಕುಂದ, ಕೋಮಲ್ ಕುಮಾರ್, ವಿನಯ್ ಕುಮಾರ ಹಾಗೂ ಉಮಾ ನರೇಂದ್ರಬಾಬು, ನೆಲದನಿ ಬಳಗದ ರುಕ್ಮಿಣಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.