ಮೇ 2ರ ಸೋಮವಾರದಿಂದ 6 ರಿಂದ 12 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಾಗುವುದು, ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
ರಾಜಧಾನಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ 6 ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಾಗುತ್ತದೆ.
ರಾಜ್ಯದಲ್ಲಿ ದೊಡ್ಡಮಟ್ಟದ ಅಭಿಯಾನ ನಡೆಸುವ ಯೋಚನೆ ಮಾಡಿದ್ದೇವೆ ಮುಖ್ಯಮಂತ್ರಿಗಳ ಜೊತೆ ಈಗಾಗಲೇ ಇದರ ಬಗ್ಗೆ ಚರ್ಚೆ ಮಾಡಿದ್ದು, ಬರುವ ಸೋಮವಾರದಿಂದಲೇ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ಕೋವಿಡ್ ಬಗ್ಗೆ ಭಯ ಬೇಡ
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಆದರೆ ಈ ಬಗ್ಗೆ ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ. ದೊಡ್ಡಮಟ್ಟದಲ್ಲಿ ಪ್ರಕರಣಗಳು ದಾಖಲಾಗಿಲ್ಲ ಆದರೂ ಜನ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಬೂಸ್ಟರ್ ಡೋಸ್ ಪಡೆಯುವವರ ಸಂಖ್ಯೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಒಮಿಕ್ರೋನ್ ಹೊಸ ತಳಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಸಚಿವ ಸುಧಾಕರ್ , ಅನೇಕರು ಹೊಸ ಮಾದರಿಯ ವೈರಸ್ನಿಂದ ಬಾಧಿತರಾಗಿದ್ದಾರೆ.
ವೈರಸ್ ನ ಸ್ಯಾಂಪಲನ್ನು ಈಗಾಗಲೇ ಲ್ಯಾಬ್ ಗೆ ಕಳಿಸಲಾಗಿದೆ, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.